ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು ಕೇಂದ್ರ ಸ್ಥಾನದಲ್ಲಿ ವಾಸ ಮಾಡಲೇಕು ಎಂದು ರಾಜ್ಯ ಸರ್ಕಾರ 2012ರಲ್ಲಿಯೇ ಹೊರಡಿಸಿರುವ ಸುತ್ತೋಲೆ ಮತ್ತೆ ಮುನ್ನಲೆಗೆ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ.
ಸುತ್ತೋಲೆಯಲ್ಲೇನಿದೆ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ರಾಜ್ಯ ಸರ್ಕಾರವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು ಕಛೇರಿ ಕೆಲಸ ಪ್ರಾರಂಭವಾಗುವ ಮುನ್ನ ಅಂದರೆ ಬೆಳಿಗ್ಗೆ 8ಗಂಟೆಯಿಂದ ಸಾರ್ವಜನಿಕರಿಗೆ ಲಭ್ಯವಿರಬೇಕಿದೆ. ಇನ್ನು ಸಾಯಂಕಾಲ ಕಛೇರಿ ವೇಳೆ ಮುಗಿದ ನಂತರವೂ ಸಾರ್ವಜನಿಕರ ಕುಂದುಕೊರತೆ ಮತ್ತು ಕಾರ್ಯಗಳನ್ನು ಪರಿಹರಿಸಲು ಆದ್ಯತೆಯ ಮೇಲೆ ಇರುವುದು ಅತ್ಯವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಗ್ರಾಮ ಪಂಚಾಯತಿಯ ಕೇಂದ್ರ ಸ್ಥಾನದಲ್ಲಿಯೇ ವಾಸಿಸುತ್ತಿರುವ ಬಗ್ಗೆ ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವರದಿ ನೀಡಬೇಕಿದೆ. ಇಲ್ಲದಿದ್ದರೆ ಶಿಸ್ತು ಕ್ರಮ ಇಲಾಖೆ ಕೈಗೊಳ್ಳುವುದು ಮತ್ತು ಈ ಬಗ್ಗೆ ಯಾವುದೇ ಲೋಪ ದೋಷಗಳು ಉಂಟಾದಲ್ಲಿ ಇದಕ್ಕೆ ಸಂಬಂಧಪಟ್ಟ ನೌಕರರನ್ನೇ ನೇರ ಹೊಣೆಗಾರರನ್ನಾಗಿ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.
ಜನಾಭಿಪ್ರಾಯ: ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಬೇಜವಾಬ್ದಾರಿ ವರ್ತನೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಪ್ರಮುಖ ಅಭಿವೃದ್ಧಿ ಕಾರ್ಯಕ್ರಮಗಳು ಕುಂಠಿತವಾಗಿವೆ. ಆಯವ್ಯಯ ಹಂಚಿಕೆ ಕೂಡ ಸರಿಯಾಗಿ ನಡೆಯುತ್ತಿಲ್ಲ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ. ಗ್ರಾಮದ ಆರ್ಥಿಕ ಭದ್ರತೆಗೆ ಕೂಡ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಗೈರು ಹಾಜರಿ ಕೊಡಲಿ ಏಟು ಕೊಡುತ್ತಿದೆ ಎನ್ನುವುದು ಜನಸಾಮಾನ್ಯರ ಅಭಿಪ್ರಾಯವಾಗಿದೆ.
ಹೆಚ್ಚಿನ ಜವಾಬ್ದಾರಿ: ಸರ್ಕಾರದ ಯೋಜನೆಗಳಾದ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ, ಗ್ರಾಮ ಸ್ವರಾಜ್, ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ನಿಧಿಯ ಕಾರ್ಯಕ್ರಮಗಳು ಸ್ವರ್ಣ ಜಯಂತಿ ಸ್ವರೋಜ್ಗಾರ್ ಯೋಜನೆ, ಸಂಪೂರ್ಣ ಸ್ವಚ್ಛತಾ ಆಂದೋಲನ, ಭಾರತ ನಿರ್ಮಾಣ್ ಕಾರ್ಯಕ್ರಮಗಳು ಯಶಸ್ವಿಯಾಗಿ ಅನುಷ್ಟಾನಗೊಳ್ಳಬೇಕಾದರೆ ಗ್ರಾಮ ಮಟ್ಟದ ಅಧಿಕಾರಿಗಳು ಅವರಿಗೆ ಗುರುತು ಮಾಡಿದ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ ವಾಸವಾಗಿರುವುದು ಅನಿವಾರ್ಯವಾಗಿದೆ. ಹೀಗಿದ್ದರೂ ಸಹ ಬಹಳಷ್ಟು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಕೇಂದ್ರ ಸ್ಥಾನದಲ್ಲಿ ವಾಸವಿರುವುದಿಲ್ಲವೆಂಬ ಅಂಶ ಸರ್ಕಾರದ ಗಮನಕ್ಕೆ ಬಂದಿದ್ದು, ಇದು ಈಗಲೂ ತೀರಾ ಗಂಭೀರವಾದ ವಿಷಯವಾಗಿ ಪರಿಣಮಿಸಿದೆ.
ಸೇವಾ ನಿಯಮ: ಕರ್ನಾಟಕ ನಾಗರೀಕ ಸೇವಾ ನಿಯಮ 26(ಎ) ಪ್ರಕಾರ ಸರ್ಕಾರಿ ನೌಕರನ ಪೂರ್ಣ ಸಮಯ ಅವನಿಗೆ ವೇತನ ನೀಡುತ್ತಿರುವ ಸರ್ಕಾರದ ಕೆಲಸಕ್ಕಾಗಿ ಮೀಸಲಾಗಿರಬೇಕಿದೆ. ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿನ ಅತ್ಯಂತ ಮೂಲಭೂತ ಅವಶ್ಯಕ ಸೇವೆಗಳಾದ ಕುಡಿಯುವ ನೀರು, ನೈರ್ಮಲ್ಯ, ಇತ್ಯಾದಿ ಸೌಲಭ್ಯಗಳನ್ನು ಜನರಿಗೆ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾದೆ. ಆದ್ದರಿಂದ ಗ್ರಾಮೀಣ ಮಟ್ಟದ ಸರ್ಕಾರಿ ನೌಕರರುಗಳಾದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಈ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವುದು ಕಡ್ಡಾಯವಾಗಿದೆ.