News

ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಕಟ್ಟಡಗಳ ಮೇಲೆ ರಾಜಕೀಯ ನಾಯಕರ ಫೋಟೋ: ವಿವರಣೆ ಕೇಳಿದ ಹೈಕೋರ್ಟ್

Share It

ಬೆಂಗಳೂರು: ಸರ್ಕಾರಿ ಕಟ್ಟಡಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ನಾಯಕರ ಫೋಟೋಗಳನ್ನು ಹಾಕುವುದು ಬಯಲು ಜಾಗ ವಿರೂಪ ತಡೆ ಕಾಯ್ದೆ ವ್ಯಾಪ್ತಿಗೆ ಬರುತ್ತದೆಯೇ ಎಂಬ ಕುರಿತಂತೆ ವಿವರಣೆ ಕೇಳಿ ಹೈಕೋರ್ಟ್ ಬಿಬಿಎಂಪಿಗೆ ನಿರ್ದೇಶನ ನೀಡಿದೆ.

ಬಿಬಿಎಂಪಿ ಹಾಗೂ ಇತರೆ ಸರ್ಕಾರಿ ಕಟ್ಟಡಗಳಲ್ಲಿ, ಉದ್ಯಾನವನಗಳಲ್ಲಿ ವಿಜಯನಗರ ಶಾಸಕ ಎಂ. ಕೃಷ್ಣಪ್ಪ, ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ ಅವರ ಫೋಟೋಗಳನ್ನು ಬಿಬಿಎಂಪಿ ಹಣದಲ್ಲಿ ಹಾಕಲಾಗಿದೆ ಎಂದು ಆಕ್ಷೇಪಿಸಿ ಸ್ಥಳೀಯ ನಿವಾಸಿ ಎಚ್.ಎಂ.ಆರ್ತೀಶ್ ಎಂಬವರು ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾ.ಎಂ.ಐ.ಅರುಣ್ ಅವರಿದ್ದ ವಿಭಾಗೀಯ ಪೀಠ ವಿವರಣೆ ನೀಡುವಂತೆ ಬಿಬಿಎಂಪಿಗೆ ಸೂಚಿಸಿದೆ.

ಪ್ರಕರಣದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ರಾಷ್ಟ್ರಪತಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ, ಪ್ರಧಾನಮಂತ್ರಿ, ಮುಖ್ಯಮಂತ್ರಿ ಮತ್ತು ಇಲಾಖಾ ಸಚಿವರ ಚಿತ್ರಗಳನ್ನು ಹೊರತುಪಡಿಸಿ, ಸಂಸದರು, ಶಾಸಕರು ಸೇರಿದಂತೆ ಬೇರೆ ಯಾರದೇ ಚಿತ್ರಗಳನ್ನು ಸರ್ಕಾರದ ಕಟ್ಟಡಗಳಲ್ಲಿ ಪ್ರಕಟಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಹಾಗಿದ್ದೂ, ಪ್ರಿಯಕೃಷ್ಣ ಮತ್ತು ಕೃಷ್ಣಪ್ಪ ಅವರ ಚಿತ್ರಗಳನ್ನು ಬಿಬಿಎಂಪಿ ವ್ಯಾಪ್ತಿಯ ಕಟ್ಟಡಗಳಲ್ಲಿ ಹಾಕಲಾಗಿದೆ. ಅದೂ ಸಹ ಬಿಬಿಎಂಪಿಯ ಹಣದಲ್ಲಿ. ಈ ವಿಚಾರವಾಗಿ ಪ್ರಶ್ನಿಸಿದ ಅರ್ಜಿದಾರರಿಗೆ ಈ ಇಬ್ಬರೂ ಶಾಸಕರು ಬೆದರಿಕೆ ಹಾಕಿದ್ದಾರೆಂದು ನ್ಯಾಯಪೀಠಕ್ಕೆ ವಿವರಿಸಿದರು.

ಬಿಬಿಎಂಪಿ ಪರ ವಕೀಲರು ವಾದ ಮಂಡಿಸಿ, ಈ ವಿಚಾರದಲ್ಲಿ ಪಾಲಿಕೆ ಸುತ್ತೋಲೆಯೊಂದನ್ನು ಹೊರಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಈ ವೇಳೆ ನ್ಯಾಯಾಲಯ ಫೋಟೋ ಅಳವಡಿಸುವುದು ವಿರೂಪಗೊಳಿಸುವ ವ್ಯಾಪ್ತಿಗೆ ಬರುತ್ತದೆಯೇ ಎಂದು ಕೇಳಿತು. ಇದಕ್ಕೆ ಉತ್ತರಿಸಿದ ಪಾಲಿಕೆ ಪರ ವಕೀಲರು ಈ ಕುರಿತಂತೆ ಮತ್ತಷ್ಟು ಮಾಹಿತಿ ಸಂಗ್ರಹಿಸಬೇಕಾಗಿದೆ ಎಂದು ತಿಳಿಸಿದರು.

ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ, ರಾಜಕೀಯ ನಾಯಕರ ಫೋಟೋಗಳನ್ನು ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಸ್ಥಳಗಳಲ್ಲಿ ಹಾಕುವುದು ಕರ್ನಾಟಕ ಬಯಲು ಜಾಗಗಳ ವಿರೂಪ ತಡೆ ಕಾಯ್ದೆ ಗೆ ವಿರುದ್ಧವಾಗಲಿದೆಯೇ ಎಂಬ ಅಂಶವನ್ನು ತಿಳಿದುಕೊಂಡು ಪ್ರಮಾಣಪತ್ರ ಸಲ್ಲಿಸುವಂತೆ ಬಿಬಿಎಂಪಿ ಪರ ವಕೀಲರಿಗೆ ನಿರ್ದೇಶಿಸಿ, ವಿಚಾರಣೆಯನ್ನು ಮಾರ್ಚ್ 21ಕ್ಕೆ ಮುಂದೂಡಿದೆ.


Share It

You cannot copy content of this page