ಬೆಂಗಳೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪದಡಿ ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧ ದಾಖಲಿಸಿರುವ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಕಳೆದ ವಿಧಾನಸಭೆ ಚುನಾವಣೆ ವೇಳೆ ಸಚಿವ ಚಲುವರಾಯಸ್ವಾಮಿ ವಿರುದ್ಧ ಸುರೇಶ್ ಗೌಡ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಸಚಿವ ಚಲುವರಾಯಸ್ವಾಮಿ ಅವರು ಕೋಟ್ಯಂತರ ರೂಪಾಯಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಸುರೇಶ್ ಗೌಡ ಆರೋಪಿಸಿದ್ದರು. ಈ ಸಂಬಂಧ ವಿವಿಧ ಪತ್ರಿಕೆಗಳಲ್ಲಿ ವರದಿಯಾಗಿತ್ತು.
ನಂತರ ಚಲುವರಾಯಸ್ವಾಮಿ, ತನ್ನ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸುರೇಶ್ ಗೌಡ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ನಾಗಮಂಗಲದಿಂದ ಸ್ಪರ್ಧಿಸಿ ತಮ್ಮ ವಿರುದ್ಧ ಸೋತ ಸುರೇಶ್ ಗೌಡ ಅವರು ನೀಡಿರುವ ಹೇಳಿಕೆಗಳು ನನ್ನ ವರ್ಚಸ್ಸಿಗೆ ಧಕ್ಕೆ ತಂದಿದ್ದು, ಐಪಿಸಿ ಸೆಕ್ಷನ್ 499ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಾಗಿವೆ ಎಂದು ಆರೋಪಿಸಿ ಚಲುವರಾಯಸ್ವಾಮಿ ಮ್ಯಾಜಿಸ್ಟ್ರೇಟ್ ಗೆ ದೂರು ಸಲ್ಲಿಸಿದ್ದರು
ದೂರಿನ ವಿಚಾರಣೆ ನಡೆಸಿದ ಕೋರ್ಟ್ ಸುರೇಶ್ ಗೌಡ ವಿರುದ್ಧದ ಆರೋಪಗಳ ಮೇಲೆ ಕಾಗ್ನಿಸೆನ್ಸ್ ತೆಗೆದುಕೊಂಡು ವಿಚಾರಣೆ ಆರಂಭಿಸಿತ್ತು. ಜತೆಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ಹಾಗೂ ಕೋರ್ಟ್ ವಿಚಾರಣೆಯನ್ನು ರದ್ದುಪಡಿಸುವಂತೆ ಕೋರಿ ಸುರೇಶ್ ಗೌಡ ಹೈಕೋರ್ಟ್ ಮೊರೆ ಹೋಗಿದ್ದರು.
ಸುರೇಶ್ ಗೌಡ ಅವರ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ದೂರುದಾರರ ವಿರುದ್ಧ ಚುನಾವಣೆಯಲ್ಲಿ ಸೋತ ನಂತರ ಮಾಧ್ಯಮಗಳಲ್ಲಿ ಪ್ರಕಟವಾದ ಅರ್ಜಿದಾರರ ಹೇಳಿಕೆಗಳು ಮೇಲ್ನೋಟಕ್ಕೆ ಮಾನನಷ್ಟಕರವೆಂದು ನ್ಯಾಯಾಲಯ ಹೇಳಿದೆ. ಅವರು ನೀಡಿದ ಹೇಳಿಕೆಗಳು ಮಾನಹಾನಿಕರವಲ್ಲ ಎಂದು ಹೇಳಲು ಅರ್ಜಿದಾರರಿಗೆ ಪೂರ್ಣ ವಿಚಾರಣೆಯ ಅಗತ್ಯವಿದೆ. ಮ್ಯಾಜಿಸ್ಟ್ರೇಟ್ ಆದೇಶದಲ್ಲಿ ಮಧ್ಯಪ್ರವೇಶಿಸುವ ಯಾವುದೇ ಅಂಶಗಳಿಲ್ಲ ಎಂದು ಅಭಿಪ್ರಾಯಪಟ್ಟಿದೆ.