Education News

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸಲು ಕ್ರಮ ಕೈಗೊಳ್ಳಲು ಮುಂದಾದ ಪಾಲಿಕೆ

Share It

ಬೆಂಗಳೂರು: ಬಿಬಿಎಂಪಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಪಾಲಿಕೆ ಮುಂದಾಗಿದೆ.

ಪಾಲಿಕೆಯ ಒಡೆತನದಲ್ಲಿರುವ ಪ್ರೌಡಶಾಲೆಗಳಲ್ಲಿ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದ್ದು, ಈ ಸಂಬಂಧ ಎಲ್ಲಾ ಪ್ರೌಢಶಾಲೆಗಳಿಗೂ ಅನಿರೀಕ್ಷಿತವಾಗಿ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಯಾವ ರೀತಿ ಶಿಕ್ಷಣ ನೀಡಲಾಗುತ್ತಿದೆ ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಬಿಬಿಎಂಪಿ ಒಡೆತನದಲ್ಲಿ 33 ಪ್ರೌಢಶಾಲೆಗಳು ಬರಲಿದ್ದು, 2024-25ನೇ ಸಾಲಿನಲ್ಲಿ 3148 ಬಾಲಕರು, 4248 ಬಾಲಕಿಯರು ಸೇರಿದಂತೆ ಒಟ್ಟು 7396 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಎಸ್.ಎಸ್.ಎಲ್.ಸಿ ಅಂತಿಮ ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಶಾಲೆಗಳಲ್ಲಿಯೂ ಬೆಳಗ್ಗೆ ಮತ್ತು ಸಂಜೆ ಎರಡೂ ವೇಳೆ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ.

ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಫಲಿತಾಂಶವನ್ನು ಹೆಚ್ಚಿಸುವ ಉದ್ದೇಶದಿಂದ ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಸಂಬಂಧ ಪ್ರತಿನಿತ್ಯ ಬೆಳಗ್ಗೆ ಹಾಗೂ ಸಂಜೆ ಸೇರಿ 3 ಗಂಟೆಗಳಿಗೂ ಹೆಚ್ಚು ಕಾಲ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳು ನೆಡೆಯುತ್ತಿವೆ.

ವಲಸಿಗ ವಿದ್ಯಾರ್ಥಿಗಳಿಗೆ ಹೆಚ್ಚು ಆದ್ಯತೆ:

ಪಾಲಿಕೆ ವ್ಯಾಪ್ತಿಯಲ್ಲಿರುವ ಶಾಲಾ/ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಪಾಲಿಕೆಯ ಶಾಲಾ/ಕಾಲೇಜುಗಳಲ್ಲಿ ಬೇರೆ ಜಿಲ್ಲೆ, ಬೇರೆ ರಾಜ್ಯಗಳಿಂದ ಬಂದಿರುವ ತೆಲುಗು, ಹಿಂದಿ, ತಮಿಳು ವಿದ್ಯಾರ್ಥಿಗಳೇ ಹೆಚ್ಚಿದ್ದಾರೆ. ಈ ವಿದ್ಯಾರ್ಥಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದು, ಕನ್ನಡ ಭಾಷೆ ಕಲಿಯುವುದು ಕಷ್ಟವಾಗಿದ್ದು, ಉತ್ತಮ ಅಂಕಗಳನ್ನು ಗಳಿಸುವ ಸಲುವಾಗಿ ಶಿಕ್ಷಕರಿಂದ ವಿಶೇಷ ತರಗತಿಗಳನ್ನು ಹಮ್ಮಿಕೊಂಡು ನುರಿತ ಶಿಕ್ಷಣವನ್ನು ನೀಡಲಾಗುತ್ತಿದೆ. ಅದಲ್ಲದೆ ಬೇರೆ ಯಾವ ವಿಷಯಗಳಲ್ಲಿ ಹಿನ್ನೆಡೆಯಿದ್ದಾರೆ ಎಂಬುದನ್ನು ಅರಿತು ಆ ವಿಷಯಕ್ಕೆ ಸಂಬಂಧಿಸಿದಂತೆ ಉತ್ತಮ ತರಬೇತಿ ಕೊಡಲಾಗುತ್ತಿದೆ.

ಅನಿರೀಕ್ಷಿತ ತಪಾಸಣೆ:

ಶಾಲಾ ಶಿಕ್ಷಕರು ತರಗತಿಗಳಲ್ಲಿ ನೀಡುತ್ತಿರುವ ಬೋಧನೆಯನ್ನು ಖುದ್ದು ಪರಿಶೀಲಿಸುವ ನಿಟ್ಟಿನಲ್ಲಿ ಅನಿರೀಕ್ಷಿತ ತಪಾಸಣೆಯನ್ನು ನಡೆಸಲಾಗುತ್ತಿದೆ. ಈಗಾಗಲೇ ಲಗ್ಗೆರೆ, ಶಕ್ತಿ ಗಣಪತಿ ನಗರ, ವಿಜಯನಗರ, ಮಾಗಡಿ ರಸ್ತೆಯಲ್ಲಿರುವ ಪ್ರೌಢಶಾಲೆ ಸೇರಿದಂತೆ 8 ಪ್ರೌಢಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದ್ದು, ಎಲ್ಲಾ ಪ್ರೌಢಶಾಲೆಗಳಿಗೂ ಅನಿರೀಕ್ಷಿತವಾಗಿ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಚಟುವಟಿಗಳನ್ನು ಹೆಚ್ಚಿಸುವ ಸಂಬಂಧ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದನ್ನು ಹಿರಿಯ ಅಧಿಕಾರಿಗಳು ಪರಿಶೀಲಿಸಲಿದ್ದಾರೆ.

ಕಾಲೇಜುಗಳಿಗೂ ಶೀಘ್ರ ಭೇಟಿ:

ಎಸ್.ಎಸ್.ಎಲ್.ಸಿ ಪರೀಕ್ಷೆ ಸಮೀಪಿಸುತ್ತಿರುವ ಕಾರಣ ಎಲ್ಲಾ ಪ್ರೌಡಶಾಲೆಗಳಿಗೆ ಮೊದಲು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಅನಂತರ ಕಾಲೇಜುಗಳಿಗೆ ಅಧಿಕಾರಿಗಳು ಭೇಟಿ ನೀಡಲಿದ್ದಾರೆ.

ಶೇ 100 ರಷ್ಟು ಫಲಿತಾಂಶದ ಗುರಿ:

ಪ್ರಸಕ್ತ ಸಾಲಿನ ಪಾಲಿಕೆ ಒಡೆತನದಲ್ಲಿರುವ ಶಾಲಾ-ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ, ಶೇ. 100ಕ್ಕೆ 100 ರಷ್ಟು ಫಲಿತಾಂಶ ಪಡೆಯುವ ಗುರಿಯನ್ನು ಪಾಲಿಕೆಯ ಶಿಕ್ಷಣ ವಿಭಾಗವು ಹೊಂದಲಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.


Share It

You cannot copy content of this page