ಬೆಂಗಳೂರು: ಏಪ್ರಿಲ್ 2ರಂದು ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ನಡುವಿನ ಐಪಿಎಲ್ ಪಂದ್ಯಕ್ಕೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯ ವಹಿಸಿಲಿದ್ದು, ಸುಗಮ ಸಂಚಾರದ ದೃಷ್ಟಿಯಿಂದ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಡ್ಡಾಯವಾಗಿ ಪಾರ್ಕಿಂಗ್ ನಿಷೇಧಿಸಲಾಗಿದೆ.
ಏಪ್ರಿಲ್ 2ರಿಂದ ಮೇ 5ರವರೆಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ನಾಲ್ಕೂ ದಿನಗಳಲ್ಲಿ ಸಂಜೆ 3 ಗಂಟೆಯಿಂದ ರಾತ್ರಿ 11ರವರೆಗೆ ಈ ಮಾರ್ಪಾಡು ಇರಲಿದೆ. ಮುಖ್ಯವಾಗಿ ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ, ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ, ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಯಲ್ಲಿ, ಸೆಂಟ್ರಲ್ ಸ್ಟ್ರೀಟ್, ಸಿ.ಟಿ.ಓ ವೃತ್ತದಿಂದ ಡಿಕೆನ್ಸ್ನ್ ರಸ್ತೆ ಜಂಕ್ಷನ್ವರೆಗೆ ಎರಡೂ ಕಡೆಗಳಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ.
ಇನ್ನು ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್ನಿಂದ ಡಿಕೆನ್ಸನ್ ರಸ್ತೆ ಜಂಕ್ಷನ್ವರೆಗೆ ಬಿ.ಎಂ.ಟಿ.ಸಿ ಬಸ್ ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಉಳಿದಂತೆ ಕ್ಯಾಶ್ ಫಾರ್ಮಸಿ ಜಂಕ್ಷನ್ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ, ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆವರೆಗೆ ಹಾಗೂ ಆಶಿರ್ವಾದಂ ವೃತ್ತದವರೆಗೆ, ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ ಪಾರ್ಕಿಂಗ್ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಲಾಗಿದೆ.
ಕಬ್ಬನ್ ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ, ಪೌಂಟೇನ್ ರಸ್ತೆಗಳಲ್ಲಿ, ವಿಠಲ್ ಮಲ್ಯ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಸೆಂಟ್ ಮಾರ್ಕ್ಸ್ ರಸ್ತೆಯ ಬಿಷಪ್ ಕಾಟನ್ ಬಾಲಕಿಯರ ಶಾಲೆಯವರೆಗೆ, ಲ್ಯಾವೆಲ್ಲಿ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್ ವರೆಗೆ ವಾಹನಗಳ ನಿಲುಗಡೆಯನ್ನು ನಾಲ್ಕೂ ದಿನ ನಿಷೇಧಿಸಲಾಗಿದೆ.
ಎಲ್ಲೆಲ್ಲಿ ಪಾರ್ಕಿಂಗ್ ಮಾಡಬಹುದು:
ಪಂದ್ಯ ವೀಕ್ಷಣೆ ಮಾಡಲು ಬರುವ ಸಾರ್ವಜನಿಕರ ವಾಹನಗಳನ್ನು ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ ಮತ್ತು ಯುಬಿ ಸಿಟಿ ಪಾರ್ಕಿಂಗ್ ಸ್ಥಳದಲ್ಲಿ, ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ, ಕೆಎಸ್ಸಿಎ ಸದಸ್ಯರ ವಾಹನಗಳನ್ನು ಸೆಂಟ್ ಜೋಸೆಫ್ (ಯೂರೋಪಿಯನ್) ಬಾಲಕರ ಶಾಲೆ ಮೈದಾನ (ಮ್ಯೂಸಿಯಂ ರಸ್ತೆ) ದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಸಾರ್ವಜನಿಕ ಸಾರಿಗೆ ಬಳುಸುವಂತೆ ಕೋರಿಕೆ:
ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲೂ ವಾಹನಗಳ ನಿಲುಗಡೆ ಸ್ಥಳದ ಕೊರತೆ ಇರುವುದರಿಂದ ಹಾಗೂ ಕ್ರೀಡಾಂಗಣ ಸುತ್ತ ಮುತ್ತ ಸಂಚಾರ ದಟ್ಟಣೆ ತಪ್ಪಿಸಲು ಕ್ರಿಕೆಟ್ ಪಂದ್ಯಗಳ ವೀಕ್ಷಣೆಗೆ ಬರುವ ಪ್ರೇಕ್ಷಕರು ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆ (ಬಿಎಂಟಿಸಿ ಹಾಗೂ ಮೆಟ್ರೋ) ಸೇವೆಯನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಕೋರಿದ್ದಾರೆ.