ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುವ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏ.16 ಮತ್ತು 17 ರಂದು ನಡೆಯಲಿದ್ದು, ಅದಕ್ಕೆ ಹಲವು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಏ.15ರಂದು ಕನ್ನಡ ಭಾಷಾ ಪರೀಕ್ಷೆಯು ಬೆಂಗಳೂರು, ಮಂಗಳೂರು, ವಿಜಯಪುರ ಮತ್ತು ಬೆಳಗಾವಿ ನಗರಗಳ ಒಟ್ಟು ಐದು ಕೇಂದ್ರಗಳಲ್ಲಿ ನಡೆಯಲಿದೆ. ಏ.16ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ ಹಾಗೂ ಏ.17ರಂದು ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳ ಪರೀಕ್ಷೆಗಳು ನಡೆಯಲಿದ್ದು, ಹಿಂದೆಂದಿಗಿಂತ ಹೆಚ್ಚು ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ನೇಮಕಾತಿ ಪರೀಕ್ಷೆಗಳಿಗೆ ಮಾಡುವ ಹಾಗೆ ಈ ಪರೀಕ್ಷೆಗೂ ಕ್ಯಾಮರಾ ಕಣ್ಗಾವಲು ಇರಲಿದೆ. ವೆಬ್ ಕಾಸ್ಟಿಂಗ್ ಮೂಲಕ ಎಲ್ಲ 775 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ಇಡುವ ವ್ಯವಸ್ಥೆ ಮಾಡಿದ್ದು, ಹೆಚ್ಚು ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪರೀಕ್ಷೆಗಳ ಮೇಲುಸ್ತುವಾರಿ ನಡೆಸಲಿದ್ದಾರೆ.
ಒಂದೂವರೆ ಗಂಟೆ ಮುಂಚೆ ತಪಾಸಣೆ:
ಪೊಲೀಸ್/ ಗೃಹ ರಕ್ಷಕ ದಳದ ಸಿಬ್ಬಂದಿ ಅಭ್ಯರ್ಥಿಗಳನ್ನು ತೀವ್ರ ತಪಾಸಣೆ ಮಾಡಿಯೇ ಪರೀಕ್ಷಾ ಕೇಂದ್ರದೊಳಗೆ ಬಿಡಲಿದ್ದಾರೆ. ಹೀಗಾಗಿ ಕನಿಷ್ಠ ಒಂದೂವರೆ ಗಂಟೆ ಮುಂಚೆಯೇ ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಬಂದು ತಪಾಸಣೆಗೆ ಒಳಗಾಗಬೇಕಿದೆ. ಅಭ್ಯರ್ಥಿಯ ಮುಖ ಚಹರೆ ಮತ್ತು ಕ್ಯೂಆರ್ ಕೋಡ್ ವ್ಯವಸ್ಥೆ ಮೂಲಕ ಅಭ್ಯರ್ಥಿಯ ನೈಜತೆ ಪರಿಶೀಲನೆ ಮಾಡಲಾಗಲಿದೆ. ಯಾರದ್ದೊ ಪರೀಕ್ಷೆಯನ್ನು ಇನ್ಯಾರೊ ಬರೆಯುವುದನ್ನು ತಡೆಯುವ ಉದ್ದೇಶದಿಂದ ಈ ವ್ಯವಸ್ಥೆ ಜಾರಿ ಮಾಡಿದ್ದು, ಸೀಟು ಹಂಚಿಕೆಯಾಗಿ ಕಾಲೇಜುಗಳಿಗೆ ಪ್ರವೇಶ ಆಗುವ ಸಂದರ್ಭದಲ್ಲಿ ಕೂಡ ಅಭ್ಯರ್ಥಿಯ ಭಾವಚಿತ್ರವನ್ನು ಹೋಲಿಕೆ ಮಾಡಿಯೇ ಪ್ರವೇಶ ನೀಡುವ ವ್ಯವಸ್ಥೆ ಜಾರಿಯಲ್ಲಿರಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಎಲ್ಲರೂ ಸಿಇಟಿ ಬರೆಯಲು ಅರ್ಹ:
ನಕಲಿ ಅಭ್ಯರ್ಥಿಗಳಿಗೆ ಸಂಪೂರ್ಣ ಕಡಿವಾಣ ಹಾಕಲಾಗಿದೆ. ಕಷ್ಟಪಟ್ಟು ಓದಿದ ಅಭ್ಯರ್ಥಿಗಳಿಗೆ ಯಾವುದೇ ಮೋಸ ಆಗಲು ಬಿಡುವುದಿಲ್ಲ. ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದು, ನಿಶ್ಚಿಂತೆಯಿಂದ ಪರೀಕ್ಷೆ ಬರೆಯಬಹುದಾಗಿದೆ. ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವ ಅಥವಾ ಅನುತ್ತೀರ್ಣರಾಗಿರುವವರಿಗೆ ಇನ್ನೂ ಫಲಿತಾಂಶವನ್ನು ಉತ್ತಮ ಮಾಡಿಕೊಳ್ಳಲು ಅವಕಾಶ ಇರುವ ಕಾರಣ ಯಾರೂ ಸಿಇಟಿ ಬರೆಯುವುದನ್ನು ತಪ್ಪಿಸಿಕೊಳ್ಳಬಾರದು. ಹೀಗಾಗಿ ಯಾರೆಲ್ಲ ಶುಲ್ಕ ಪಾವತಿಸಿದ್ದೀರೊ ಅವರೆಲ್ಲರೂ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಂಡು ಪರೀಕ್ಷೆ ಬರೆಯಬೇಕು. ದ್ವಿತೀಯ ಪಿಯುಸಿಯ 3ನೇ ಪರೀಕ್ಷೆಯ ಅಂಕಗಳನ್ನು ಪಡೆದು ರಾಂಕ್ ಕೊಡುವ ವ್ಯವಸ್ಥೆ ಕೂಡ ಇದ್ದು, ಯಾರೂ ಇದರಿಂದ ಅವಕಾಶ ವಂಚಿತರಾಗಬಾರದು ಎಂದು ಸಲಹೆ ನೀಡಿದ್ದಾರೆ.
ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ:
ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ವಸ್ತ್ರ ಸಂಹಿತೆ ಮಾಡಿದ್ದು, ಕಡ್ಡಾಯವಾಗಿ ಎಲ್ಲರೂ ಪಾಲಿಸಬೇಕು. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಧ ತೋಳಿನ ಬಟ್ಟೆ ಧರಿಸಬೇಕು. ಸಾಧ್ಯವಾದಷ್ಟು ಕಾಲರ್ ಇಲ್ಲದಿರುವುದನ್ನು ಹಾಕಿಕೊಂಡು ಬಂದರೆ ಉತ್ತಮ. ಪುರುಷರು, ಜೇಬು ಇಲ್ಲದ ಅಥವಾ ಕಡಿಮೆ ಜೇಬುಗಳಿರುವ ಸರಳ ಪ್ಯಾಂಟ್ ಧರಿಸಬೇಕು. ಕುರ್ತಾ ಪೈಜಾಮ, ಜೀನ್ಸ್ ಪ್ಯಾಂಟ್ ಗೆ ಅವಕಾಶ ಇರುವುದಿಲ್ಲ. ಶೂ ಕೂಡ ನಿಷೇಧಿಸಲಾಗಿದೆ. ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್ ಇತ್ಯಾದಿ ಎಲೆಕ್ಟ್ರಾನಿಕ್ ವಸ್ತುಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ಒಮ್ಮೆ ಕೆಇಎ ವೆಬ್ ಸೈಟ್ ನಲ್ಲಿ ಇರುವ ವಸ್ತ್ರ ಸಂಹಿತೆಯ ವಿವರಗಳನ್ನು ಓದಿಕೊಂಡು, ಆ ಪ್ರಕಾರ ಪರೀಕ್ಷೆಗೆ ಬರಬೇಕು ಎಂದು ಎಚ್.ಪ್ರಸನ್ನ ಹೇಳಿದ್ದಾರೆ.