News

ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು ಎತ್ತರಿಸುವಂತೆ ಆಗ್ರಹ

Share It

ಬೆಂಗಳೂರು: ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 515 ಮೀಟರನಿಂದ 524.256 ವರೆಗೆ ಎತ್ತರಿಸಬೇಕು ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ಆಗ್ರಹಿಸಿದರು.

ಈ ಕುರಿತು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು ಹೆಚ್ಚಿಸಲು ಯಾವುದೇ ಕಾನೂನಿನ ತೊಡಕುಗಳಿಲ್ಲವೆಂದು ಕಾನೂನು ತಜ್ಞರ ಅಭಿಪ್ರಾಯವಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಗೇಟ್ ಅಳವಡಿಸಲು ಯಾವುದೇ ತೊಡಕು ಇಲ್ಲವೆಂದು ಕಾವೇರಿ ಐತೀರ್ಪು ಮತ್ತು ಮಹದಾಯಿ ಐತೀರ್ಪುಗಳು ಗೆಜೆಟ್ ಅಧಿಸೂಚನೆ ಹೊರಡಿಸಿದಂತೆ ಕೃಷ್ಣಾ ಜಲವಿವಾದ ನ್ಯಾಯಾಧೀಕರಣ-2 ಬ್ರಿಜೇಶ್ ಕುಮಾರ ಆಯೋಗದ ಐತೀರ್ಪನ್ನು ಸಹ ಗೆಜೆಟ್ ಪ್ರಕಟಣೆ ಮಾಡಬೇಕೆಂದು ಒತ್ತಾಯಿಸಿದರು.

ಕೃಷ್ಣಾ ಜಲವಿವಾದ ನ್ಯಾಯಾಧೀಕರಣ-2ರ ಐತೀರ್ಪು ಪ್ರಕಟವಾಗಿ 15 ವರ್ಷಗಳು ಗತಿಸಿವೆ. ಐತೀರ್ಪಿನ ಅವಧಿ 40 ವರ್ಷದ್ದಾಗಿದೆ. ಹೀಗೆಯೇ ಇನ್ನೈದು ವರ್ಷ ಕಳೆದರೆ ಐತೀರ್ಪು ಅನುಷ್ಠಾನದ ಅರ್ಧ ಅವಧಿ ಪೂರ್ಣಗೊಳ್ಳುತ್ತದೆ. ಬಾಕಿ ಉಳಿದ ಅವಧಿಯಲ್ಲಿ ಕರ್ನಾಟಕ ತನ್ನ ಹಕ್ಕಿನ ನೀರನ್ನು ಬಳಸಿಕೊಳ್ಳುವಲ್ಲಿ ಯಾವುದೇ ರೀತಿಯಲ್ಲಿ ನ್ಯಾಯ ದೊರಕಿಸಿದಂತಾಗುವುದಿಲ್ಲ ಎಂದು ಹೇಳಿದರು.

ರೈತರ ಹೊಲಗಳಿಗೆ ಹರಿಯಬೇಕಾದ ನೀರು ಸಮುದ್ರಕ್ಕೆ ಹರಿದು ವ್ಯರ್ಥವಾಗುತ್ತಿದೆ. 16 ಸಾವಿರ ಕೋಟಿ ರೂಪಾಯಿಯ ಬಂಡವಾಳ ಹೂಡಿ ಕೃಷ್ಣಾ ಮೇಲ್ದಂಡೆ ಯೋಜನೆ-3 ಅಡಿಯಲ್ಲಿ ಕಾಲುವೆ ಜಾಲ ನಿರ್ಮಾಣ ಮಾಡಲಾಗಿದೆ. ಆದರೆ, ಈ ಕಾಲುವೆಯ ಜಾಲ ವ್ಯರ್ಥವಾಗುತ್ತಿದೆ ಎಂದು ತಿಳಿಸಿದರು.

ಕರ್ನಾಟಕದ ನ್ಯಾಯಯುತ ಹಕ್ಕಿಗೆ ಕೇಂದ್ರ ಸರ್ಕಾರ ಕೊಡಲಿಪೆಟ್ಟು ಹಾಕಿ ರಾಜ್ಯದ ಹಕ್ಕನ್ನು ನಿರಾಕರಿಸಿ ಕೆಳದಂಡೆ ರಾಜ್ಯಗಳಾದ ಆಂಧ್ರ ಮತ್ತು ತೆಲಂಗಾಣ ರಾಜ್ಯಗಳು ಕರ್ನಾಟಕದ ಪಾಲಿನ ನೀರನ್ನು ಬಳಕೆ ಮಾಡಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸುತ್ತಿದೆ ಎಂದು ಆರೋಪಿಸಿದರು.

ಪ್ರವಾಹ ಪರಿಸ್ಥಿತಿಯು ಸಹ ನಮ್ಮನ್ನು ಬಾಧಿಸುತ್ತಿದ್ದು, ಕಳೆದ 5 ವರ್ಷಗಳಲ್ಲಿ ಐದೂ ವರ್ಷವು ಪ್ರವಾಹದಿಂದ ಕೃಷ್ಣಾ ನದಿ ಪಾತ್ರದ ಬಹುತೇಕ ಭಾಗ ಪ್ರವಾಹಪೀಡಿತವಾಗಿದೆ. ಪ್ರವಾಹ ನಿರ್ವಹಣೆಗಾಗಿ ನಾವು ಈ ನೀರನ್ನು ಕಾಲುವೆಗೆ ಹರಿಸಿಕೊಳ್ಳಬಹುದು ಎಂಬ ರಚನಾತ್ಮಕ ಸಲಹೆಯನ್ನು ಸಭೆಯಲ್ಲಿ ನೀಡಿರುವುದಾಗಿ ತಿಳಿಸಿದರು.


Share It

You cannot copy content of this page