ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ತಡೆಗಟ್ಟಲು ಹೆಚ್ಚಿನ ಮುನ್ನೆಚ್ಚರಿಕಾ ಕ್ರಮ ವಹಿಸಲು 700 ಸ್ವಯಂ ಸೇವಕರು ಹಾಗೂ 240 ಆರೋಗ್ಯ ನಿರೀಕ್ಷಣಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ನಗರದ ಪುರಭವನದಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ರಾಷ್ಟ್ರೀಯ ಡೆಂಘೀ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ನಗರದಲ್ಲಿ ಶೇ. 40 ರಿಂದ 50 ರಷ್ಟು ಡೆಂಘೀ ಪ್ರಕರಣಗಳು ಕಂಡುಬರುತ್ತಿದ್ದು, ನಾಗರಿಕರು ಕೂಡ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಪರಿಶೀಲಿಸಿ, ಸ್ವಚ್ಛಗೊಳಿಸಿ, ಮುಚ್ಚಿಡಿ ಎಂಬ ಘೋಷವಾಕ್ಯದೊಂದಿಗೆ ಡೆಂಘೀ ಸೋಲಿಸುವ ಅಭಿಯಾನವನ್ನು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಪ್ರಾರಂಭಿಸಲಾಗಿದ್ದು, ಸಾರ್ವಜನಿಕ ಸ್ಥಳಗಳು, ನೀರು ನಿಲ್ಲುವ ಪ್ರದೇಶಗಳಲ್ಲಿ ಡೆಂಘೀ ತರುವ ಸೊಳ್ಳೆಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದರು.

ವಿಶೇಷವಾಗಿ ಸಾರ್ವಜನಿಕರು ಸ್ವಯಂ ಸ್ವಚ್ಚತೆಗೆ ಆದ್ಯತೆ ನೀಡಿ, ಸುರಕ್ಷತಾ ಕ್ರಮಗಳನ್ನು ಕೈಗೊಂಡಾಗ ಮಾತ್ರ ಡೆಂಘೀ ನಿಯಂತ್ರಣ ಮಾಡಲು ಸಾಧ್ಯ. ಬೆಂಗಳೂರನ್ನು ಡೆಂಘೀ ಮುಕ್ತ ನಗರವನ್ನಾಾಗಿ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಸ್ವಯಂ ಸೇವಕರು, ಆಶಾ ಕಾರ್ಯಕರ್ತೆಯರು ಆರೋಗ್ಯ ಸಿಬ್ಬಂದಿಗಳು, ಎಲ್ಲರೂ ಸೇರಿ ಉತ್ತಮ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ದಿನೇಶ್ ಗುಂಡೂರಾವ್ ಕರೆ ನೀಡಿದರು.