ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ ನಾಲ್ಕನೇ ವರ್ಷದ ಘಟಿಕೋತ್ಸವ ನಾಳೆ ಬೆಳಗ್ಗೆ 11 ಗಂಟೆಗೆ ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ.
ಘಟಿಕೋತ್ಸವದ ಕುರಿತು ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಆರ್. ಜಲಜಾ, ರಾಜ್ಯಪಾಲ ಥಾವರ ಚಂದ್ ಗೆಹಲೋತ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಉಪಸ್ಥಿತರಿರಲಿದ್ದಾರೆ. ಪಾಟ್ನಾ, ಬಿಹಾರ ಹೈಕೋರ್ಟ್ ನ್ಯಾಯಮೂರ್ತಿ ಪಿ.ಬಿ. ಜಂತ್ರಿ ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ ಎಂದರು.
ರಾಜ್ಯ ಸರ್ಕಾರ ಜಾರಿಯಲ್ಲಿ ತಂದಿರುವ ಯುಯುಸಿಎಂಎಸ್ ತಂತ್ರಾಂಶದ ಪ್ರಕಾರ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆ ಹಾಗೂ ಪರೀಕ್ಷೆ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ವಹಿಸಿ ವಿದ್ಯಾರ್ಥಿಗಳಿಗೆ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗುತ್ತಿದೆ ಎಂದು ಹೇಳಿದರು.
ಗಣಿತ ಶಾಸ್ತ್ರ-6, ರಸಾಯನಶಾಸ್ತ್ರ-1 ಮತ್ತು ಶಿಕ್ಷಣ-2 ವಿಭಾಗದಲ್ಲಿ ಪಿ.ಎಚ್.ಡಿ ಪದವೀಧರರು ಬೆಂಗಳೂರು ನಗರ ವಿಶ್ವವಿದ್ಯಾಲಯದ ನಾಲ್ಕನೇ ಘಟಿಕೋತ್ಸವದಲ್ಲಿ ಪದವಿ ಪಡೆಯಲಿದ್ದಾರೆ. ಘಟಿಕೋತ್ಸವದಲ್ಲಿ ಒಟ್ಟು 64 ವಿದ್ಯಾರ್ಥಿಗಳು ಚಿನ್ನದ ಪದಕ ಮತ್ತು ನಗದು ಬಹುಮಾನವನ್ನು ಸ್ವೀಕರಿಸಲಿದ್ದಾರೆ. ಅವರಲ್ಲಿ 14 ವಿದ್ಯಾರ್ಥಿಗಳು ಮತ್ತು 50 ವಿದ್ಯಾರ್ಥಿನಿಯರಿದ್ದಾರೆ ಎಂದು ವಿವರಿಸಿದರು.
ಸ್ನಾತಕ ಪದವಿಯಲ್ಲಿ ಒಟ್ಟು 26 ರ್ಯಾಂಕ್ ವಿಜೇತರಾಗಿದ್ದಾರೆ, ಅದರಲ್ಲಿ-20 ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳು-6 ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಒಟ್ಟು 38 ರ್ಯಾಂಕ್ ವಿಜೇತರಿದ್ದು, ವಿದ್ಯಾರ್ಥಿನಿಯರು-30 ಮತ್ತು ವಿದ್ಯಾರ್ಥಿಗಳು-8 ಅಲ್ಲದೇ, 9 ಪಿಎಚ್ಡಿ ವಿದ್ಯಾರ್ಥಿಗಳು ಪದವಿಯನ್ನು ಸ್ವೀಕರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಪ್ರೊ.ಬಿ.ರಮೇಶ್ ಮತ್ತು ಸಿಂಡಿಕೇಟ್ ಸದಸ್ಯರು ಉಪಸ್ಥಿತರಿದ್ದರು.