ಬೆಂಗಳೂರು: ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಶೇ. 100 ರಷ್ಟು ಸಮೀಕ್ಷೆ ಪೂರ್ಣಗೊಳಿಸುವ ಸಲುವಾಗಿ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಎಂದು ಅಧಿಕಾರಿಗಳಿಗೆ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಸೂಚನೆ ನೀಡಿದರು.

ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯಕ್ಕೆ ಸಂಬಂಧಿಸಿದಂತೆ ಪಶ್ಚಿಮ ವಲಯದ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಸಮೀಕ್ಷೆ ಪೂರ್ಣಗೊಳಿಸಿರುವ ಎಲ್ಲಾ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿದರೆ ಸರ್ವೆ ಮಾಡಬೇಕಿರುವ ಮನೆಗಳನ್ನು ಸುಲಭವಾಗಿ ಗುರುತಿಸಬಹುದಾಗಿರುತ್ತದೆ. ಈ ನಿಟ್ಟಿನಲ್ಲಿ ಕೂಡಲೇ ಎಲ್ಲಾ ಮನೆಗಳಿಗೆ ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿಬೇಕು. ಸ್ಟಿಕ್ಕರ್ ಅಂಟಿಸುವ ವೇಳೆ ಸರ್ವೆ ಆಗಿದೆಯೇ ಇಲ್ಲವೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಅದಕ್ಕಾಗಿ ಎನ್.ಎಸ್.ಎಸ್, ಎನ್.ಸಿ.ಸಿ, ನೋಂದಾಯಿತ ಸಂಸ್ಥೆಗಳ ಸಹಯೋಗ ಪಡೆಯಬೇಕು. ಬೆಸ್ಕಾಂ, ಜಲಮಂಡಳಿಯ ದತ್ತಾಂಶದ ಆಧಾರದ ಮೇಲೆ ಸಮೀಕ್ಷೆ ಕಾರ್ಯವನ್ನು ಪರಿಶೀಲಿಸಿ, ಬಾಕಿ ಸಮೀಕ್ಷೆ ಮಾಡಬೇಕಿರುವುದನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ವಿವಿಧ ಆಯಾಮದಲ್ಲಿ ಸಮೀಕ್ಷಾ ಕಾರ್ಯ:
ಸಮೀಕ್ಷಾ ಕಾರ್ಯದಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸುವ ಉದ್ದೇಶದಿಂದ ಜೂನ್ರ 22ರವರೆಗೆ ಅವಧಿಯನ್ನು ವಿಸ್ತರಿಸಿ, ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ನಾಗರೀಕ ಸೇವಾ ಕೇಂದ್ರಗಳಾದ, ಕರ್ನಾಟಕ ಒನ್ ಬೆಂಗಳೂರು ಒನ್ ಮತ್ತು ಗ್ರಾಮ ಒನ್ ಕೇಂದ್ರಗಳು. ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಸಮೀಕ್ಷೆಗೆ ಅವಕಾಶ ಕಲ್ಪಿಸಲಾಗಿದೆ. ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ ಕಚೇರಿಗಳಲ್ಲಿ ಪ್ರತ್ಯೇಕವಾದ ಶಿಬಿರಗಳ ವ್ಯವಸ್ಥೆ ಮಾಡಲಾಗಿದೆ. ಸ್ವಯಂ ಪ್ರೇರಿತವಾಗಿ ಆನ್ ಲೈನ್ ಲಿಂಕ್ ಮೂಲಕ ಸಹ ಸಮೀಕ್ಷೆಯಲ್ಲಿ ಪ್ಯಾಲ್ಗೊಳ್ಳಬಹುದು ಎಂದರು.

1.78 ಲಕ್ಷ ಪರಿಶಿಷ್ಟ ಜಾತಿ ಮನೆಗಳ ಸಮೀಕ್ಷೆ:
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 27 ವಿಧಾನಸಭಾ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯ ಸಕ್ರಿಯವಾಗಿ ನಡೆಯುತ್ತಿದ್ದು, ಇಂದಿನವರೆಗೆ 1,77,718 ಪರಿಶಿಷ್ಟ ಜಾತಿಯವರ ಮನೆಗಳಿಗೆ ಹಾಗೂ 32,02,449 ಪರಿಶಿಷ್ಟ ಜಾತಿಯಲ್ಲದ ಮನೆಗಳಿಗೆ ಭೇಟಿ ನೀಡಿ ದತ್ತಾಂಶ ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ವೇಳೆ ವಲಯ ಜಂಟಿ ಆಯುಕ್ತ ಸಂಗಪ್ಪ, ಉಪ ಆಯುಕ್ತರು, ಕಂದಾಯ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಇದ್ದರು.