ಬೆಂಗಳೂರು: 2024-25 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಶಾಲೆಗಳ ಮುಖ್ಯಸ್ಥರ ವಿರುದ್ಧ ಶಾಲಾ ಶಿಕ್ಷಣ ಇಲಾಖೆ ನೋಟಿಸ್ ಜಾರಿಗೊಳಿಸಿದೆ. ಜತೆಗೆ ಫಲಿತಾಂಶ ಕಡಿಮೆ ಬಂದಿರುವ ಅನುದಾನಿತ ಶಾಲೆಗಳ ಶಿಕ್ಷಕರ ವೇತನಕ್ಕೆ ಕತ್ತರಿ ಹಾಕಲು ಮುಂದಾಗಿದೆ.
ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಹಲವಾರು ಶಾಲೆಗಳು ಶೇ.60 ಕ್ಕಿಂತ ಕಡಿಮೆ ಉತ್ತೀರ್ಣ ಫಲಿತಾಂಶ ಪಡೆದಿವೆ. ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ, ಕಲಿಕೆಯ ಮಟ್ಟ ಉನ್ನತೀಕರಣ ಕ್ರಮಗಳೊಂದಿಗೆ ಫಲಿತಾಂಶವನ್ನು ಉತ್ತಮಗೊಳಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮರ್ಪಕವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿಲ್ಲದಿರುವುದು ಕಂಡುಬಂದಿದೆ.
ಶಾಲಾ ಮುಖ್ಯ ಶಿಕ್ಷಕರ ಈ ಧೋರಣೆ ಕರ್ತವ್ಯದಲ್ಲಿ ನಿರ್ಲಕ್ಷತೆ ಮತ್ತು ಕರ್ತವ್ಯ ಲೋಪವನ್ನು ತೋರಿಸುತ್ತಿದ್ದು, ಶೈಕ್ಷಣಿಕವಾಗಿ ಶಾಲೆಯ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಉತ್ತಮ ಪಡಿಸುವಲ್ಲಿ ಸರಿಯಾದ ಮಾರ್ಗದರ್ಶನವನ್ನು ನೀಡದೇ ಕರ್ತವ್ಯ ನಿರ್ಲಕ್ಷತೆ ತೋರಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದಾಗಿ ನೋಟೀಸ್ ನಲ್ಲಿ ಉಲ್ಲೇಖಿಸಲಾಗಿದೆ.
ಈ ಹಿನ್ನಲೆಯಲ್ಲಿ ಕರ್ನಾಟಕ ನಾಗರೀಕ ಸೇವಾ(ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳ ಅಡಿಯಲ್ಲಿ ನೋಟಿಸ್ ಜಾರಿಗೊಳಿಸಿದ್ದು, ಈ ಕರ್ತವ್ಯ ನಿರ್ಲಕ್ಷತೆಗೆ ಏಕೆ? ನೋಟಿಸ್ ಜಾರಿಗೊಳಿಸಬಾರದು ಎಂಬುದಕ್ಕೆ ಶಾಲಾ ಮುಖ್ಯಸ್ಥರಿಂದ ಲಿಖಿತ ಸಮಜಾಯಿಷಿಯನ್ನು 7 ದಿನಗಳೊಳಗಾಗಿ ಶಾಲಾ ಶಿಕ್ಷಣ ಇಲಾಖೆ ಕಚೇರಿಗೆ ಸಲ್ಲಿಸಲು ಸೂಚಿಸಲಾಗಿದೆ.