News

ಕಾಲ್ತುಳಿತ ಪ್ರಕರಣ: ಮಾಜಿ ಪೊಲೀಸ್ ಆಯುಕ್ತ ಬಿ.ದಯಾನಂದ್ ವಿಚಾರಣೆಗೆ ಹಾಜರು

Share It

ಬೆಂಗಳೂರು: ಆರ್’ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಬಂಧಿಸಿದಂತೆ ಅಮಾನತುಗೊಂಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಮತ್ತು ನಗರದ ಮಾಜಿ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಗುರುವಾರ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದರು.

ಜಿಲ್ಲಾಧಿಕಾರಿ ಜಿ.ಜಗದೀಶ್‌, ಎರಡು ಬಾರಿ ನೋಟಿಸ್‌ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗದ ಬಿ.ದಯಾನಂದ್‌ 3 ವಾರಗಳ ಬಳಿಕ ಗುರುವಾರ ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಅವರನ್ನು ವಿಚಾರಣೆ ನಡೆಸಲಾಗಿದೆ.

ಕಾರ್ಯಕ್ರಮ ಆಯೋಜನೆಗೆ ಕೆಎಸ್ ಸಿಎ ಸೇರಿ ಸಂಬಂಧಿಸಿದ ಸಂಸ್ಥೆಗಳು ಅನುಮತಿ ಕೋರಿರುವುದು, ಭದ್ರತಾ ಕ್ರಮಗಳು, ಸಾವು ನೋವಿನ ಮಾಹಿತಿ ಸೇರಿ ಇನ್ನಿತರ ವಿಚಾರಗಳ ಬಗ್ಗೆ ವಿಚಾರಣಾಧಿಕಾರಿ ಹೇಳಿಕೆ ಪಡೆದುಕೊಂಡರು ಎಂದು ತಿಳಿದುಬಂದಿದೆ.

ಆರ್‌ಸಿಬಿ ಆಡಳಿತ ಮಂಡಳಿ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (ಕೆಎಸ್‌ಸಿಎ) ಮತ್ತು ಡಿಎನ್‌ಎ, ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆ ಕೋರಿದ ಅನುಮತಿಗಳು ಹಾಗೂ ಪೊಲೀಸ್ ಇಲಾಖೆಯೊಳಗಿನ ಮತ್ತು ರಾಜ್ಯ ಸರ್ಕಾರದೊಂದಿಗಿನ ಆಂತರಿಕ ಮಾತುಕತೆ ಬಗ್ಗೆಯೂ ಅಧಿಕಾರಿಗಳು ಪ್ರಶ್ನಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.


Share It

You cannot copy content of this page