ಬೆಂಗಳೂರು: ಮಾದಕ ವಸ್ತು ವ್ಯಸನಕ್ಕೆ ಸಿಲುಕಿ ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ಹಾಳು ಮಾಡಿಕೊಳ್ಳಬಾರದು. ರಾಜ್ಯದ ಸರಿ ಸುಮಾರು 6.5 ಲಕ್ಷ ವಿದ್ಯಾರ್ಥಿಗಳಿಗೆ ಡ್ರಗ್ಸ್ ದುಷ್ಪರಿಣಾಮ ಕುರಿತು ಅರಿವು ಮೂಡಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
66ನೇ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು, ರಕ್ಷಾ ಕ್ಯೂಆರ್ ಕೋಡ್ಗೆ ಚಾಲನೆ ನೀಡಿ ಮಾತನಾಡಿದರು.
ರಾಜ್ಯದಲ್ಲಿ ಮಾದಕ ದ್ರವ್ಯ ಜಾಲ ಮಟ್ಟ ಹಾಕಲು ರಾಜ್ಯ ಸರ್ಕಾರ ದಿಟ್ಟ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ತುರ್ತು ನೆರವಿಗಾಗಿ ರಕ್ಷಾ ಕ್ಯೂಆರ್ ಕೋಡ್ ಆರಂಭಿಸಲಾಗಿದೆ ಎಂದು ತಿಳಿಸಿದರು.ಪ್ರತಿ ತಿಂಗಳು ತಮ್ಮ ಠಾಣಾ ಸರಹದ್ದಿನ ಶಾಲಾ-ಕಾಲೇಜುಗಳಿಗೆ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆಯಬೇಕು. ಅಲ್ಲದೆ, ಡ್ರಗ್ಸ್ ಮಾರಾಟ ಜಾಲಕ್ಕೆ ವಿದ್ಯಾರ್ಥಿಗಳು ಸಿಲುಕದಂತೆ ತಡೆಗಟ್ಟಲು ಕಾಲೇಜು ಮಟ್ಟದಲ್ಲಿ ಮಾದಕ ವಸ್ತು ನಿಗ್ರಹ ಸಮಿತಿ ರಚಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
ಡ್ರಗ್ಸ್ ವಿಚಾರದಲ್ಲಿ ರಾಜ್ಯ ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ರಾಜೀಮಾಡಿಕೊಳ್ಳುವುದಿಲ್ಲ. ಡ್ರಗ್ಸ್ ಚಟುವಟಿಕೆಯ ಬಗ್ಗೆ ಗೊತ್ತಾದ ಕೂಡಲೇ ಸಾರ್ವಜನಿಕರು ಕ್ಯೂ ಆರ್ಕೋಡ್ ಮೂಲಕ ಪೊಲೀಸರಿಗೆ ಮಾಹಿತಿ ನೀಡಬೇಕು. ತಮ್ಮ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಕಾನೂನು ಬಾಹಿರ ಕೃತ್ಯಗಳಿಗೆ ನಾಗರಿಕರು ಆಸ್ಪದ ಕೊಡಬಾರದು ಎಂದು ತಿಳಿಸಿದರು.