ಬೆಂಗಳೂರು: ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ನಾಳೆಯಿಂದ (ಸೆಪ್ಟೆಂಬರ್ 15, 16 ಮತ್ತು 17) ಮೂರು ದಿನಗಳ ಕಾಲ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಹೇಳಿದೆ.
ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಸೆ.15,16 ಮತ್ತು 17ರಂದು ಸ್ಥಗಿತಗೊಳಿಸಲಾಗುತ್ತಿದೆ. ಈ ಕಾರಣಕ್ಕೆ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಾಹಿತಿ ನೀಡಿದೆ.
ಬೆಂಗಳೂರು ನಗರದ ಜನತೆಗೆ ಯಾವುದೇ ಅಡೆತಡೆಯಿಲ್ಲದೇ ಕುಡಿಯುವ ನೀರನ್ನು ಸರಬರಾಜು ಮಾಡಲು ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಗಾರಗಳು ಮತ್ತು ಮುಖ್ಯ ಕೊಳವೆ ಮಾರ್ಗಗಳ ಚಾಲನೆಯನ್ನು ಖಚಿತಪಡಿಸಿಕೊಳ್ಳಲಾಗಲಿದೆ. ಪೂರೈಕೆ ಸುಸ್ಥಿತಿಯಲ್ಲಿಡುವ ಉದ್ದೇಶದಿಂದ ವಿವಿಧೆಡೆ ನಿಯಮಿತ ತುರ್ತು ನಿರ್ವಹಣೆ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಲಮಂಡಳಿ ತಿಳಿಸಿದೆ.
ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಾಗಾರಗಳ ಸ್ಥಗಿತತೆಯಿಂದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ ನಾಗರಿಕರು ಮುಂಜಾಗ್ರತೆ ಕ್ರಮವಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಕೊಳ್ಳಬೇಕು ಎಂದು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ.