ಬೆಂಗಳೂರು: ಜೆ.ಪಿ ಉದ್ಯಾನದಲ್ಲಿ ಜಯಪ್ರಕಾಶ್ ನಾರಾಯಣ ಅವರ ಪುತ್ಥಳಿ ಮರು ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಉದ್ಯಾನದ ಸೌಂದರ್ಯೀಕರಣ, ಈಜುಕೊಳ, ಯೋಗಶಾಲೆ, ಜಿಮ್ ಹಾಗೂ ಮಕ್ಕಳ ಆಟದ ಮೈದಾನ, ಟಾಯ್ ಟ್ರೈನ್ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.
ಬೆಂಗಳೂರು ನಡಿಗೆ ಕಾರ್ಯಕ್ರಮದ ಪ್ರಯುಕ್ತ ಭಾನುವಾರ ನಗರದ ಜೆ.ಪಿ ಉದ್ಯಾನದಲ್ಲಿ ಸಾರ್ವಜನಿಕರ ಜೊತೆ ಹೆಜ್ಜೆ ಹಾಕಿದ ಡಿಸಿಎಂ ಅವರು ಜನರ ಅಹವಾಲುಗಳನ್ನು ಆಲಿಸಿದರು. ಪಾಲಿಕೆ ಆಯುಕ್ತರು ಹಾಗೂ ಜೆ.ಪಿ.ಪಾರ್ಕ್ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳಿಂದ ಉದ್ಯಾನದಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು. ಟಾಯ್ ಟ್ರೈನ್, ಮಕ್ಕಳ ಆಟಿಕೆಗಳು ಸೇರಿದಂತೆ ಮೂಲಸೌಕರ್ಯಗಳ ಕೊರತೆ ಏಕೆ ಉಂಟಾಗಿದೆ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು.
ಪ್ರತಿದಿನವೂ ಎಲ್ಲಾ ಶೌಚಾಲಯಗಳಿಗೂ ಬೀಗ ಹಾಕಲಾಗಿರುತ್ತದೆ ಎನ್ನುವ ದೂರಿಗೆ ಪ್ರತಿಕ್ರಿಯಿಸಿ ಇನ್ನೆರಡು ದಿನದಲ್ಲಿ ಈ ಸಮಸ್ಯೆ ಬಗೆಹರಿಯಲೇ ಬೇಕು ಎಂದು ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ರಿಗೆ ಸೂಚನೆ ನೀಡಿದರು. ಅಲ್ಲಿ ಜಿಮ್ ಪರಿಕರಗಳು ಹಾಳಾಗಿರುವುದನ್ನು ನೋಡಿದ ಡಿಸಿಎಂ ಗರಂ ಆದರು.
ಉದ್ಯಾನದಲ್ಲಿನ ಅಧ್ವಾನಗಳನ್ನು ನಾನೇ ಕಣ್ಣಾರೆ ನೋಡಿದ್ದೇನೆ. ಅದರ ವಿಡಿಯೋ ಚಿತ್ರೀಕರಣ ಕೂಡ ಮಾಡಿಸಿದ್ದೇನೆ. ಜಿಬಿಎ ವ್ಯಾಪ್ತಿಯಲ್ಲಿ ಯಾವುದೇ ಕುಂದುಕೊರತೆಗಳು, ಸಮಸ್ಯೆಗಳು ಕಂಡುಬಂದರೆ 1533 ಸಹಾಯವಾಣಿಗೆ ದೂರು ನೀಡಿ ನಿಮ್ಮ ಅಹವಾಲನ್ನು ಸಲ್ಲಿಸಬಹುದು ಎಂದರು.
ಎಲ್ಲಿ ಕಸವಿದೆ, ರಸ್ತೆಗುಂಡಿಯಿದೆ ಎಂದು ಈ ಮೊದಲು ಸರ್ಕಾರದ ಗಮನಕ್ಕೆ ತರುವ ವ್ಯವಸ್ಥೆ ಸಾರ್ವಜನಿಕರಿಗೆ ಇತ್ತೇ? ನಾನು ಮೊಬೈಲ್ ಆ್ಯಪ್ ಮೂಲಕ ದೂರು ಸಲ್ಲಿಸುವ ವ್ಯವಸ್ಥೆ ತಂದಿದ್ದೇನೆ. ತೆರಿಗೆದಾರರಿಗೆ ಗೌರವ ಕೊಡಬೇಕಿರುವುದು ನಮ್ಮ ಕರ್ತವ್ಯ. ಬೆಂಗಳೂರು ಯೋಜಿತ ನಗರವಲ್ಲ. ಕಂದಾಯ ಬಡಾವಣೆಗಳಾದ ನಂತರ ಪಾಲಿಕೆಯಾಗಿ ಪರಿವರ್ತನೆಯಾಗಿದೆ. ಕೆಲವೊಂದು ಕಡೆ ಮಾತ್ರ ಯೋಜಿತ ಬಡಾವಣೆಗಳಿವೆ. ಯಾವುದೇ ಪಕ್ಷವಿದ್ದರೂ ಸಹ ಸೇವೆ ಮಾಡಿದ್ದು ಮಾತ್ರ ಶಾಶ್ವತವಾಗಿ ಉಳಿದುಕೊಳ್ಳುತ್ತದೆ ಎಂದರು.
ರಾಜಕುಮಾರ್ ರಸ್ತೆಯಲ್ಲಿನ ಕಸದ ಸಮಸ್ಯೆ, ಮಂಗನಪಾಳ್ಯದ ಬಳಿ ಅಂಡರ್ ಪಾಸ್ ನಿರ್ಮಾಣ, ಗಂಗಮ್ಮ ಸರ್ಕಲ್ ಬಳಿಯ ಸಮಸ್ಯೆಗಳು ಸೇರಿದಂತೆ ಎಲ್ಲರ ಅಹವಾಲುಗಳಿಗೆ ಅಧಿಕಾರಿಗಳು ನಿಮ್ಮ ಬಳಿ ಬಂದು ಪರಿಹಾರ ಒದಗಿಸುತ್ತಾರೆ ಎಂದರು.
ನಡಿಗೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ ಅಧಿಕಾರಕ್ಕೆ ಬಂದ ದಿನದಿಂದ ಕೇಳುತ್ತಿದ್ದೇವೆ. ಕಳೆದ ವರ್ಷ ಬಾಗಿಲಿಗೆ ಬಂತು ಸರಕಾರ ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮ ಆಯೋಜಿಸಿ ಸಾವಿರಾರು ಸಮಸ್ಯೆಗಳನ್ನು ಬಗೆಹರಿಸಿದ್ದೇವೆ. ಯಾರು ಏನು ಕೆಲಸ ಮಾಡುತ್ತಾರೋ ಗೊತ್ತಿಲ್ಲ. ಬೆಂಗಳೂರು ಅಭಿವೃದ್ಧಿ ಜವಾಬ್ದಾರಿ ಹೊತ್ತುಕೊಂಡು ನನ್ನ ಕರ್ತವ್ಯ ನಾನು ಮಾಡುತ್ತಿದ್ದೇನೆ ಎಂದರು.
ಸಮಸ್ಯೆಗಳನ್ನು ತಿಳಿಸಿದ ನಾಗರಿಕರ ದೂರವಾಣಿ ಸಂಖ್ಯೆಗಳನ್ನು ತೆಗೆದುಕೊಂಡಿದ್ದು ಪಾಲಿಕೆ ಅಧಿಕಾರಿಗಳು ಮತ್ತೆ ಅವರಿಗೆ ಕರೆ ಮಾಡಿ ಸಮಸ್ಯೆಗಳನ್ನು ಬಗೆಹರಿಸುತ್ತಾರೆ. ಜನರು ನಮ್ಮ ಕರೆಗೆ ಸ್ಪಂದಿಸಿ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದು ಸಂತಸವಾಯಿತು. ಪಾಲಿಕೆ ಸದಸ್ಯರಾಗಿದ್ದ ನಂಜುಡಪ್ಪ ಅವರ ಕಾಲದಲ್ಲಿ ಆಗಿದ್ದ ಕೆಲಸಗಳನ್ನು ಜನರು ಇನ್ನೂ ನೆನಪಿಸಿಕೊಳ್ಳುತ್ತಾರೆ. ಜೆಪಿ ಉದ್ಯಾನದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಆರಂಭದಲ್ಲಿಯೇ ಶಾಸಕ ಮುನಿರತ್ನ ಅಡ್ಡಿ ಪಡಿಸಿದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಅವರಿಗೆ ರಾಜಕೀಯ ಮುಖ್ಯ. ಅವರು ಆರ್.ಎಸ್.ಎಸ್ ಗೆ ಅಗೌರವ ತೋರುವ ಕೆಲಸ ಮಾಡಿದ್ದಾರೆ. ಆರ್.ಎಸ್.ಎಸ್ ಗೂ ಈ ಕಾರ್ಯಕ್ರಮಕ್ಕೂ ಏನು ಸಂಬಂಧ. ಇಲ್ಲಿಗೆ ಟೋಪಿ, ಸಮವಸ್ತ್ರ ಧರಿಸಿ ಬರುವ ಅವಶ್ಯಕತೆ ಏನಿತ್ತು?ಆರ್.ಎಸ್.ಎಸ್ ತನ್ನದೇ ಆದ ಕೆಲಸ ಮಾಡುತ್ತಿದೆ. ಅವರು ಮಾಡಿದ ಕೆಲಸ ನನಗೆ ಮಾಡಿದ ಅವಮಾನವಲ್ಲ. ಆ ಸಂಸ್ಥೆಗೆ ಮಾಡಿದ ಅವಮಾನ. ಅದಕ್ಕೆ ಒಂದು ಇತಿಹಾಸವಿದೆ ಎಂದರು.
55 ವರ್ಷಗಳ ನಂತರ ಶಾಲಾ ಗೆಳೆಯನ ಭೇಟಿ:
ಶಾಲಾ ದಿನಗಳ ಸಹಪಾಠಿ ಮಾಧವ ನಾಯಕ್ ಸಿಕ್ಕಿದ್ದನ್ನು ನೋಡಿ ಆಶ್ಚರ್ಯ ವ್ಯಕ್ತಪಡಿಸಿದ ಡಿಸಿಎಂ ನಾನು ಕಾರ್ಮೆಲ್ ಶಾಲೆಯಲ್ಲಿ ಓದುತ್ತಿದ್ದಾಗ ಶಾಲಾ ಚುನಾವಣೆಗೆ ನಿಂತಿದ್ದೆ. ನನಗೆ ಈತ ಮತ ಎಣಿಕೆ ಏಜೆಂಟ್ ಆಗಿದ್ದ. ಗಣಿತದಲ್ಲಿ ಬಹಳ ಚುರುಕಿನ ವಿದ್ಯಾರ್ಥಿಯಾಗಿದ್ದ ಎಂದು ಸಹಪಾಠಿಯ ಜೊತೆ ಫೋಟೋ ತೆಗೆಸಿಕೊಂಡರು.