ಬೆಂಗಳೂರು: ಬಸವನಗುಡಿ ಕಡಲೆಕಾಯಿ ಪರಿಷೆ 2025ರ ಸಿದ್ಧತೆ ಕಾರ್ಯ ಆರಂಭವಾಗಿದ್ದು, ಇದೇ ಮೊದಲ ಬಾರಿ ಪರಿಷೆಯು 2 ದಿನಗಳ ಬದಲಾಗಿ 5 ದಿನಗಳು ನಡೆಯಲಿದೆ. ನವೆಂಬರ್ 17 ರಂದು ಪರಿಷೆ ಆರಂಭವಾಗಲಿದ್ದು, 21 ಕ್ಕೆ ಕೊನೆಗೊಳ್ಳಲಿದೆ ಎಂದು ಗುರುವಾರ ದೊಡ್ಡ ಬಸವನಗುಡಿಯಲ್ಲಿ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರ ಅಧ್ಯಕ್ಷತೆಯ ಪೂರ್ವಭಾವೀ ಸಿದ್ಧತಾ ಸಭೆ ನಿರ್ಧಾರ ಕೈಗೊಂಡಿದೆ.
ಕಡಲೆಕಾಯಿ ಪರಿಷೆ 2024 ರಲ್ಲಿ ಸುಮಾರು 5 ಲಕ್ಷ ಭಕ್ತಾದಿಗಳು ಭಾಗವಹಿಸಿದ್ದು, ಯಶಸ್ವಿಯಾಗಿ ನಡೆದಿತ್ತು. ಪ್ಲಾಸ್ಟಿಕ್ ಮುಕ್ತ ಕಡಲೆಕಾಯಿ ಪರಿಷೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು. ಈ ವರ್ಷವೂ ಇದೇ ಮಾದರಿಯಲ್ಲಿ ವಿಜೃಂಭಣೆಯಿಂದ ಆಚರಣೆ ಮಾಡಲು ತೀರ್ಮಾನಿಸಲಾಗಿದೆ.
ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಈ ಕುರಿತು ಮಾತನಾಡಿ, ಪ್ರತಿ ವರ್ಷದಂತೆ ಕಡೇ ಕಾರ್ತಿಕ ಮಾಸದಲ್ಲಿ ಬಸವನಗುಡಿಯ ಬಸವಣ್ಣ ದೇವಾಲಯದ ಸುತ್ತ ಪರಿಷೆ ನಡೆಯಲಿದ್ದು, ನವೆಂಬರ್ 17 ರ ಸೋಮವಾರ ಬೆಳಗ್ಗೆ 10 ಗಂಟೆಗೆ ಕಡಲೆಕಾಯಿ ಪರಿಷೆ ಉದ್ಘಾಟನೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಆಗಮಿಸಲಿದ್ದಾರೆ. 21 ಬಸವಣ್ಣಗಳನ್ನು ದೇವಸ್ಥಾನಕ್ಕೆೆ ಆಹ್ವಾನಿಸಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಈ ಬಾರಿಯ ಪರಿಷೆಗೆ ಚಾಲನೆ ನೀಡಲಾಗಲಿದೆ ಎಂದು ಹೇಳಿದರು.
ಪರಿಷೆಗೆ ಬನ್ನಿ ಕೈ ಚೀಲ ತನ್ನಿ ಘೋಷಣಾ ನಾಮಫಲಕಗಳು, ವಿಜೃಂಭಣೆಯ ದೀಪಾಲಂಕಾರ ವ್ಯವಸ್ಥೆ ಇರಲಿದೆ. ಈ ವರ್ಷ 5 ದಿನಗಳಿಗೆ ಬುಲ್ ಟೆಂಪಲ್ ರಸ್ತೆ, ಗಾಂಧಿ ಬಜಾರ್ ಮತ್ತು ಎನ್. ಆರ್ ರಸ್ತೆಗಳಿಗೂ ಸೇರಿ ದೀಪಾಂಲಕಾರ ವಿಸ್ತರಿಸಲು ತೀರ್ಮಾನ ಮಾಡಲಾಗಿದೆ. ಎನ್ ಜಿ ಓ ಗಳ ಸಹಕಾರದೊಂದಿಗೆ ಪ್ಲಾಸ್ಟಿಕ್ ಕವರ್ಗಳನ್ನು ಬಳಸದಂತೆ ಹಾಗೂ ಬಟ್ಟೆ ಬ್ಯಾಗ್ ಗಳನ್ನು ಬಳಸಲು ಅಂಗಡಿಯವರಿಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸಾಲಗಲಿದೆ ಎಂದು ಹೇಳಿದರು.
ಈ ವರ್ಷವೂ ಇರುವುದಿಲ್ಲ ಸುಂಕ ವಸೂಲಾತಿ:
ಬುಲ್ ಟೆಂಪಲ್ ರಸ್ತೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಸುಂಕ ವಸೂಲಾತಿಗೆ ಪ್ರತಿ ವರ್ಷ ಟೆಂಡರ್ ಕರೆಯಲಾಗಿದ್ದು, ಟೆಂಡರ್ದಾರರು ಅಂಗಡಿಯವರಿಂದ ಬಲವಂತವಾಗಿ ಹೆಚ್ಚು ಸುಂಕವನ್ನು ವಸೂಲಿ ಮಾಡುತ್ತಿರುವುದಾಗಿ ಕಳೆದ ವರ್ಷ ದೂರುಗಳು ಬಂದ ಹಿನ್ನೆಲೆ ಸುಂಕ ವಸೂಲಾತಿ ಟೆಂಡರ್ನ್ನು ಕೈಬಿಡಲಾಗಿತ್ತು. ಹೀಗಾಗಿ ವ್ಯಾಪಾರಸ್ಥರಿಂದ ಸುಂಕವನ್ನು ಕಳೆದ ವರ್ಷದಂತೆ ಈ ವರ್ಷವೂ ವಸೂಲಿ ಮಾಡದಂತೆ ತೀರ್ಮಾನ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ನಿರಂತರ ವಿದ್ಯುತ್, ಕುಡಿಯುವ ನೀರಿನ ವ್ಯವಸ್ಥೆೆ:
ನಿರಂತರ ವಿದ್ಯುತ್, ಕುಡಿಯುವ ನೀರಿನ ವ್ಯವಸ್ಥೆ, ಸಾರ್ವಜನಿಕ ಶೌಚಾಲಯದ ವ್ಯವಸ್ಥೆ ಬೀದಿ ದೀಪಗಳ ಅಳವಡಿಕೆ ಮತ್ತು ದುರಸ್ಥಿ, ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ಸಿ.ಸಿ.ಟಿ.ವಿಗಳನ್ನು ಪ್ರಮುಖ ಸ್ಥಳಗಳಲ್ಲಿ ಅಳವಡಿಕೆ, ಅಗ್ನಿ ಶಾಮಕ ವಾಹನಗಳ ನಿಯೋಜನೆ. ತುರ್ತು ಚಿಕಿತ್ಸೆ ವಾಹನಗಳ ವ್ಯವಸ್ಥೆ, ಮಾರ್ಷಲ್ ಗಳ ನಿಯೋಜನೆ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು..
ಸಭೆಯಲ್ಲಿ ಶಾಸಕರುಗಳಾದ ರವಿ ಸುಬ್ರಹ್ಮಣ್ಯ, ಉದಯ ಗರುಡಾಚಾರ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕೆ.ಎಂ .ನಾಗರಾಜ್, ದ್ವಾರಕಾನಾಥ್, ಬಿಬಿಎಂಪಿ ಅಡಿಷನಲ್ ಕಮೀಷನರ್ ದಿಗ್ವಿಜಯ ಬೋಡ್ಸೆ, ದೊಡ್ಡ ಗಣಪತಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷೆ ಪಾರ್ವತಿ, ಸ್ವಯಂ ಸೇವಾ ಸಂಸ್ಥೆಯವರು ಹಾಗೂ ಮುಜರಾಯಿ ಇಲಾಖೆಯ ಅಧಿಕಾರಿಗಳು ಇದ್ದರು.
