News

ಸ್ವಯಂ ಉದ್ಯೋಗ ಕೈಗೊಳ್ಳಲು ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ: ದಿನೇಶ್ ಗುಂಡೂರಾವ್

Share It

ಬೆಂಗಳೂರು: ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮೂಲಕ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ ಜಾರಿಗೆ ತರಲಾಗಿದೆ. ರೂ. 2 ಲಕ್ಷದ ವರೆಗೆ ಸಾಲ ನೀಡಲಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಕರ್ನಾಟಕ ರಾಜ್ಯ ಅಭಿವೃದ್ಧಿ ಮಂಡಳಿ ವತಿಯಿಂದ ಶುಕ್ರವಾರ ಬಬ್ಬೂರುಕಮ್ಮೆ ಸೇವಾ ಸಮಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಆಚಾರ್ಯತ್ರಯರ ಜಯಂತ್ಯುತ್ಸವ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ, ವಿವಿಧ ಕ್ಷೇತ್ರಗಳಲ್ಲಿ  ಸಾಧನೆ ಮಾಡಿರುವ 12 ಸಾಧಕರಿಗೆ ಪ್ರಶಸ್ತಿ ನೀಡಿ ಮಾತನಾಡಿದ ಅವರು, ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯ ಫಲಾನುವಿಗಳಿಗೆ ಇಂದು ಸಾಂಕೇತಿಕವಾಗಿ ಮಂಜೂರಾತಿ ಪತ್ರ ವಿತರಣೆ ಮಾಡಲಾಗಿದೆ. ಈ ಯೋಜನೆಯಡಿ ಸಾಲ ಪಡೆದವರಿಗೆ ಶೇ.20ರಷ್ಟು ಸಹಾಯಧನ ಸಿಗಲಿದೆ. ಉಳಿದ ಮೊತ್ತವನ್ನು ಶೇ.4ರ ಬಡ್ಡಿ ದರದಲ್ಲಿ 34 ಕಂತುಗಳಲ್ಲಿ ಕಟ್ಟಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ಸರ್ಕಾರವು ಪ್ರತಿ ವರ್ಷ ಅನುದಾನ ಬಿಡುಗಡೆ ಮಾಡುತ್ತಿದೆ. ಸರ್ಕಾರ ಬ್ರಾಹ್ಮಣರ ಪರವಾಗಿಯೂ ಕೆಲಸ ಮಾಡುತ್ತಿದೆ. ಬ್ರಾಹ್ಮಣ ಸಮುದಾಯ ಸಮಾಜದ ಪ್ರತಿಯೊಬ್ಬರಿಗೂ ಒಳ್ಳೆಯದಾಗಬೇಕು. ಯಾವುದೇ ಸಮುದಾಯ, ಜಾತಿ, ಜನಾಂಗ, ಭಾಷೆ ಇರಲಿ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಬ್ರಾಹ್ಮಣರ ಸಮುದಾಯದಲ್ಲಿಯೂ ಸಹ ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ. ಇದನ್ನು ಸರ್ಕಾರ ಗುರುತಿಸಿರುವುದರಿಂದ ಸರ್ಕಾರದ ದೃಷ್ಟಿಕೋನದಲ್ಲಿ ಇದ್ದೇವೆ ಎಂದು ಬ್ರಾಹ್ಮಣ ಸಮಾಜಕ್ಕೆ ಆತ್ಮಸ್ಥೈರ್ಯ ಸಿಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಚಾಣಕ್ಯ ಯೋಜನೆಗೆ ಚಾಲನೆ ನೀಡಿ ಮಾತನಾಡಿ, ಬ್ರಾಹ್ಮಣ ಸಮುದಾಯದ ಪ್ರತಿಭಾವಂತ ಪದವೀಧರರು ನಾಗರಿಕ ಸೇವೆಗಳಾದ ಐಎಎಸ್/ಕೆಎಎಸ್ ಪರೀಕ್ಷೆಗಳನ್ನು ಬರೆದು ಆಡಳಿತಾತ್ಮಕ ಸೇವೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡುವ ಸಲುವಾಗಿ ಚಾಣಕ್ಯ ಆಡಳಿತ ತರಬೇತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು 2025-26ನೇ ಸಾಲಿನಲ್ಲಿ ಪ್ರವೇಶಾತಿ ಪಡೆದು, ಪಾವತಿಸಲಾದ ತರಬೇತಿ ಶುಲ್ಕದ ಮೊತ್ತದಲ್ಲಿ  ಗರಿಷ್ಠ ಒಂದು ಲಕ್ಷ ರೂ.ಗಳಿಗೆ ಮಿತಿಗೊಳಿಸಿ ಡಿಬಿಟಿ ಮೂಲಕ ನೇರವಾಗಿ ವಿದ್ಯಾರ್ಥಿಗಳಿಗೆ  ಶುಲ್ಕ ಮರುಪಾವತಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಆದಿಗುರು ಶ್ರೀ ಶಂಕರಾಚಾರ್ಯರ ಕುರಿತು ಸಾಹಿತಿಗಳಾದ ಡಾ. ಬೆಳವಾಡಿ ಮಂಜುನಾಥ್, ಭಕ್ತಿ ಮಾರ್ಗದ ಪ್ರವರ್ತಕರಾದ ಶ್ರೀ ರಾಮಾನುಜಾಚಾರ್ಯರ ಕುರಿತು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮುಖ್ಯಸ್ಥ ಡಾ. ಶೆಲ್ವಪಿಳ್ಳೈ ಅಯ್ಯಂಗಾರ್ ಹಾಗೂ ಸಂಗೀತ ಮತ್ತು ಭಕ್ತಿಮಾರ್ಗದ ಪ್ರವರ್ತಕ ಶ್ರೀ ಮಧ್ವಾಚಾರ್ಯರ ಕುರಿತು ನಿವೃತ್ತ ಪಾಂಶುಪಾಲರು ಹಾಗೂ ಪ್ರಸಿದ್ಧ ವಿದ್ವಾಂಸರಾದ ಡಾ.ವ್ಯಾಸನಕೆರೆ ಪ್ರಭಂಜನಾಚಾರ್ಯ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಸಗೋಡು ಜಯರಾಮ, ಮಂಡಳಿಯ ನಿರ್ದೇಶಕರು, ಪ್ರಶಸ್ತಿಗೆ ಭಾಜನರಾದ ಸಾಧಕರು ಉಪಸ್ಥಿತರಿದ್ದರು.


Share It

You cannot copy content of this page