ದಾವಣಗೆರೆ: ಕೈದಿಗಳಿಗೆ ಐಷಾರಾಮಿ ಸವಲತ್ತು ನೀಡಿರುವ ಪ್ರಕರಣದಲ್ಲಿ ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದರು.
ಭಾನುವಾರ ದಾವಣಗೆರೆಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಪ್ಪನ ಅಗ್ರಹಾರಕ್ಕೆ ಸಂಬಂಧಪಟ್ಟ ಅಧಿಕಾರಿಗಳು ರಜೆಯ ಮೇಲೆ ತೆರಳಿದ್ದರು. ನಾಳೆ ಗೃಹ ಸಚಿವರು ಈ ಬಗ್ಗೆ ಸಭೆ ಕರೆದಿದ್ದಾರೆ. ಐಷಾರಾಮಿ ವಸ್ತುಗಳು ಸಿಗದಂತೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಭಾಗವತ್ ಹೇಳಿದ್ದಕ್ಕೆಲ್ಲ ಉತ್ತರಿಸಲಾಗುವುದಿಲ್ಲ:
ಬ್ರಿಟಿಷರ ಕಾಲದಲ್ಲಿಯೇ ಆರ್.ಎಸ್.ಎಸ್ ಇತ್ತು, ಆಗಲೇ ನೋಂದಣಿ ಮಾಡಿಕೊಳ್ಳಬೇಕಿತ್ತು ಎಂದು ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಆರ್.ಎಸ್.ಎಸ್ ಅನ್ನು ಹೊರಗಿಡುವ ಬಗ್ಗೆ ಸರ್ಕಾರದ ಆದೇಶದಲ್ಲಿ ಹೇಳಿಲ್ಲ. ಯಾವುದೇ ಸಂಘ ಸಂಸ್ಥೆಗಳು ಆಯಾ ಜಿಲ್ಲಾಧಿಕಾರಿಗಳ ಬಳಿ ಅನುಮತಿ ಪಡೆಯಬೇಕು ಎಂದು ಹೇಳಿದೆ. ಅವರು ಹಾಗೆ ಭಾವಿಸಿಕೊಂಡಿದ್ದಾರೆ. ಭಾಗವತ್ ಹೇಳಿದ್ದಕ್ಕೆಲ್ಲ ಉತ್ತರಿಸಲಾಗುವುದಿಲ್ಲ ಎಂದರು.
ಸರ್ಕಾರದ ತೀರ್ಮಾನಕ್ಕೆ ಸಕ್ಕರೆ ಮಾಲೀಕರು ಬದ್ಧರಾಗುವ ಭರವಸೆ ಇದೆ:
ಸಕ್ಕರೆ ಕಾರ್ಖಾನೆ ಮಾಲೀಕರು ಸರ್ಕಾರದ ತೀರ್ಮಾನದ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ ಅವರ ಸಮ್ಮುಖದಲ್ಲಿಯೇ ಈ ಬಗ್ಗೆ ತೀರ್ಮಾನ ಮಾಡಲಾಗಿದೆ. 50 ರೂ.ಗಳನ್ನು ಎಲ್ಲರೂ ಕೊಡಲೇಬೇಕು. ಕೊಡದಿರುವವರೂ ಕೊಡುತ್ತಾರೆ ಎಂದು ಭಾವಿಸಿದ್ದೇನೆ ಎಂದರು.
ಆದೇಶ ಪಾಲಿಸದ ಸಕ್ಕರೆ ಕಾರ್ಖಾನೆ ಮಾಲೀಕರ ಮೇಲೆ ಕ್ರಮ:
ಬಸನಗೌಡ ಪಾಟೀಲ ಯತ್ನಾಳ್ ಅವರು ಸಹ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸರ್ಕಾರದ ಆದೇಶ ಪಾಲಿಸದ ಸಕ್ಕರೆ ಕಾರ್ಖಾನೆ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

