News

ಅಹಿಂದ ವರ್ಗಗಳ ಸಂಘಟನೆಯಲ್ಲಿ ನನ್ನ ಕೊಡುಗೆಯಿದೆ: ಸಿಎಂ ಸಿದ್ದರಾಮಯ್ಯ

Share It

ಹಾಸನ: ಅಹಿಂದ ವರ್ಗಗಳ ಸಂಘಟನೆಯಲ್ಲಿ ನನ್ನ ಕೊಡುಗೆಯಿದೆ, ಮಂಡ್ಯಕ್ಕೆ ಕುಮಾರಸ್ವಾಮಿಯವರ ಕೊಡುಗೆಗಳೇನು ಎಂದು ಅವರು ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶನಿವಾರ ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಹಿಂದ ವರ್ಗಕ್ಕೆ ಸಿದ್ದರಾಮಯ್ಯನವರ ಕೊಡುಗೆಯ ಬಗ್ಗೆ ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಅಹಿಂದ ವರ್ಗಗಳ ಸಂಘಟನೆಯಲ್ಲಿ ನಾನು ಪ್ರಮುಖ ಪಾತ್ರ ವಹಿಸಿದ್ದು, ಅವರಿಗೆ ಗ್ಯಾರಂಟಿ ಹಾಗೂ ಅನೇಕ ಭಾಗ್ಯಯೋಜನೆಗಳನ್ನು ನೀಡಿದ್ದೇವೆ. ಕಾರ್ಮಿಕರು, ಬಡವರು, ದಲಿತರು, ಅಲ್ಪಸಂಖ್ಯಾತರು, ಮಹಿಳೆಯರ ಸಬಲೀಕರಣಕ್ಕೆ ಗ್ಯಾರಂಟಿ ಸೇರಿದಂತೆ ಅನೇಕ ಯೋಜನೆಗಳಿಂದ ಅನುಕೂಲವಾಗಿದೆ. ಕುಮಾರಸ್ವಾಮಿಯವರು ರೈತರ ಕುಟುಂಬದವರೇ ಹೊರತು, ರೈತವರ್ಗಕ್ಕೆ ಅವರ ಕೊಡುಗೆಗಳೇನಿದೆ ಎಂದು ಪ್ರಶ್ನಿಸಿದರು.

ಜಿ.ಎಸ್.ಟಿ ದರ ಕಡಿತದಿಂದ ರಾಜ್ಯಕ್ಕೆ ನಷ್ಟ:

ಸೆಪ್ಟೆಂಬರ್ ನಿಂದ ನವೆಂಬರ್ 2025ರವೆಗೆ ಕರ್ನಾಟಕಕ್ಕೆ ಜಿ.ಎಸ್.ಟಿ ಸಂಗ್ರಹದಲ್ಲಿ ನಷ್ಟವಾಗಿದೆ. 2017 ರಲ್ಲಿ ಪ್ರಧಾನಿ ಮೋದಿಯವರು ಜಿ.ಎಸ್.ಟಿ ಜಾರಿಗೆ ತಂದರು. ಅಂದಿನಿಂದಲೂ ಜನರಿಂದ ತೆರಿಗೆ ವಸೂಲಿ ಮಾಡುತ್ತಿದ್ದಾರೆ. ಈಗ ಆರ್ಥಿಕ ವರ್ಷದ ಮಧ್ಯದಲ್ಲಿಯೇ ಜಿ.ಎಸ್.ಟಿ ದರವನ್ನು ಕಡಿಮೆ ಮಾಡಿದ ಪರಿಣಾಮ, ರಾಜ್ಯ ಸರ್ಕಾರಗಳಿಗೆ ಜಿ.ಎಸ್.ಟಿ ಸಂಗ್ರಹದಲ್ಲಿ ನಷ್ಟವಾಗಿದೆ. ಕೇರಳ, ಮಹಾರಾಷ್ಟ್ರ ಮತ್ತು ಕರ್ನಾಟಕವನ್ನು ಹೊರತುಪಡಿಸಿ, ದೇಶದ ಎಲ್ಲಾ ರಾಜ್ಯಗಳಲ್ಲಿ ಜಿ.ಎಸ್.ಟಿ ಸಂಗ್ರಹದಲ್ಲಿ ಕೊರತೆ ಕಂಡಿದೆ ಎಂದರು.

ಕೇಂದ್ರ ಸರ್ಕಾರದಿಂದ ಮಂಡ್ಯ ಜನರಿಗೆ ಅನ್ಯಾಯ:

ಜಿ.ಎಸ್.ಟಿ ದರ ಕಡಿತದಿಂದ ರಾಜ್ಯಕ್ಕಾಗಿರುವ ನಷ್ಟದ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಇದುವರೆಗೂ ಧ್ವನಿ ಎತ್ತಿಲ್ಲ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಕೇಂದ್ರ ವಿತ್ತಸಚಿವರು 5300 ಕೋಟಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು. ಆದರೆ ಇದುವರೆಗೆ ಕೇಂದ್ರ ಈ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ರಾಜ್ಯದ ಪ್ರಮುಖ ಯೋಜನೆಗೆ ಇದುವರೆಗೆ ಅನುಮತಿ ದೊರೆತಿಲ್ಲ. ಇದರಿಂದ ಮಂಡ್ಯ ಜನರಿಗೆ ಅನ್ಯಾಯವಾಗಿದೆ ಎಂದರು.

ಜಿ.ಎಸ್.ಟಿ ನಲ್ಲಿ 12 ಸಾವಿರ ಕೋಟಿ ನಷ್ಟ:

ಜಿ.ಎಸ್. ಟಿ ನಲ್ಲಿ ನಮಗೆ ಈ ವರ್ಷ ಸುಮಾರು 12 ಸಾವಿರ ಕೋಟಿ ನಷ್ಟವಾಗಬಹುದೆಂಬ ಅಂದಾಜಿದೆ. 1 ಲಕ್ಷದ 26 ಕೋಟಿ ತೆರಿಗೆ ಬರಲಿದೆ ಎಂದು ಅಂದಾಜು ಮಾಡಿದ್ದೆವು. ಈಗ 12 ಸಾವಿರ ಕೋಟಿ ಅದರಲ್ಲಿ ಕಡಿಮೆಯಾಗಲಿದೆ. 88 ಸಾವಿರ ಕೋಟಿ ತಲುಪಲು ಕಷ್ಟವಾಗಲಿದೆ. ಇದನ್ನು ಏಕೆ ಪ್ರಶ್ನಿಸುವುದಿಲ್ಲ. ಕರ್ನಾಟಕದ ಮಂಡ್ಯದಿಂದ ಸಂಸದರಾಗಿದ್ದಾರಲ್ಲ ಅವರು ಅಹಿಂದಕ್ಕೆ ಏನು ಮಾಡಿದ್ದಾರೆ ಎಂದು ಪ್ರಶ್ನಿಸುತ್ತಾರೆ. ಆದರೆ ಅವರೇ ಸಂಸತ್ತಿನಲ್ಲಿ ಎಂದಾದರೂ ಈ ಬಗ್ಗೆ ಮಾತನಾಡಿದ್ದಾರೆಯೇ ಎಂದು ಪ್ರಶ್ನಿಸಿದರು.

ಪ್ರಧಾನಿ ಮೋದಿ ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ:

ಟೀಕೆ ಮಾಡಲೆಂದೇ ಮಾತನಾಡುವುದಲ್ಲ. ನಾವು ಏನು ಮಾಡಿದ್ದೇವೆ ಎಂದು ಹೇಳುತ್ತೇವೆ. ಗ್ಯಾರಂಟಿ ಯೋಜನೆಗಳಿಗೆ 1ಲಕ್ಷದ 8,135 ಕೋಟಿ ವೆಚ್ಚ ಮಾಡಿದ್ದೇವೆ. ಮಧ್ಯವರ್ತಿಗಳಿಲ್ಲದೆ ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಆಗಿದೆ. ಹಾಕಿಲ್ಲ ಎಂದು ಹೇಳಲಿ ನೋಡೋಣ. ಪ್ರಧಾನಿ ನರೇಂದ್ರ ಮೋದಿಯವರು ಕೂಡ ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ. ಒಂದು ವೇಳೆ ಜಾರಿ ಮಾಡಿದರೆ ಕರ್ನಾಟಕ ರಾಜ್ಯ ದಿವಾಳಿಯಾಗಲಿದೆ ಎಂದು ಅವರೇ ಹೇಳಿದ್ದರು.

ಮಹಿಳಾ ಮೀಸಲಾತಿ ತಕ್ಷಣ ಕೊಡಬೇಕು:

ಮಹಿಳಾ ಮೀಸಲಾತಿ ಜಾರಿಯಾಗಿಲ್ಲದಿರುವ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ ನಮ್ಮ ಸರ್ಕಾರ ಮೊದಲಿನಿಂದಲೂ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ. ಮೀಸಲಾತಿ ಕೊಡಬೇಕು ಎಂದರೆ ತಕ್ಷಣ ಕೊಡಬೇಕು. ಕೇಂದ್ರ ಸರ್ಕಾರ ಇದನ್ನು ಏಕೆ ಮುಂದೂಡಬೇಕು ಎಂದು ಪ್ರಶ್ನಿಸಿದರು.

ನಮ್ಮ ಸರ್ಕಾರ ತೆರೆದ ಪುಸ್ತಕ ಇದ್ದಂತೆ:

ವಿರೋಧ ಪಕ್ಷಗಳನ್ನು ಅವಿಶ್ವಾಸ ನಿರ್ಣಯ ತರಲಿ, ನಾವು ಎದುರಿಸಲು ತಯಾರಿದ್ದೇವೆ. ನಾವು ತೆರೆದ ಪುಸ್ತಕ ಇದ್ದಂತೆ. ನಮ್ಮದು ಪಾರದರ್ಶಕ ಸರ್ಕಾರ. ಎಲ್ಲವನ್ನು ಎದುರಿಸಲು ತಯಾರಿದ್ದೇವೆ ಎಂದರು.


Share It

You cannot copy content of this page