ಅಂಗನವಾಡಿಗಳಿಗೆ ಆಹಾರ ಪೂರೈಸುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಪ್ರಭು ಚೌವ್ಹಾಣ್ ವಿರುದ್ಧ ತನಿಖೆ ನಡೆಸುವಂತೆ ಕಲಬುರಗಿ ಹೈಕೋರ್ಟ್ ಪೀಠವು ಲೋಕಾಯುಕ್ತಕ್ಕೆ ಆದೇಶ ನೀಡಿದೆ.
ದೀಪಕ್ ಪಾಟೀಲ ಚಾಂದೋರಿ ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರು ಮಾರ್ಚ್ 5ರಂದು ಈ ಆದೇಶ ಹೊರಡಿಸಿದ್ದು, ಭ್ರಷ್ಟಾಚಾರದ ದೂರಿನ ಕುರಿತು ಒಂದು ತಿಂಗಳೊಳಗೆ ಕಾನೂನು ಪ್ರಕಾರ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.
ಔರಾದ್ ಕ್ಷೇತ್ರದ ಅಂಗನವಾಡಿಗಳಿಗೆ ಪೌಷ್ಟಿಕ ಆಹಾರ ಪೂರೈಕೆಯ ಟೆಂಡರ್ ನೀಡುವುದಕ್ಕೆ ಪ್ರತಿಯಾಗಿ ಸುಂದ್ರಮ್ಮ ಟ್ರೇಡಿಂಗ್ ಕಂಪನಿಯಿಂದ ಸುಮಾರು 1 ಕೋಟಿ ರೂ. ಲಂಚ ಪಡೆದಿದ್ದಾರೆ ಎಂಬ ಆರೋಪವನ್ನು ದೀಪಕ್ ಪಾಟೀಲ್ ಚಾಂದೋರಿ ಮಾಡಿದ್ದಾರೆ.
ಈ ಕುರಿತು ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳು, ಸುಂದ್ರಮ್ಮ ಟ್ರೇಡಿಂಗ್ ಕಂಪನಿ ಹಾಗೂ ಶಾಸಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು 2025ರ ನ.10ರಂದು ಲೋಕಾಯುಕ್ತ ಎಡಿಜಿಪಿ ಹಾಗೂ ಬೀದರ್ ಡಿವೈಎಸ್ಪಿ ಅವರಿಗೆ ದೂರು ಸಲ್ಲಿಸಿದ್ದರು. ಆದರೆ ದೂರಿನ ಕುರಿತು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಅವರು 2026ರ ಫೆ.2ರಂದು ಕಲಬುರಗಿ ಹೈಕೋರ್ಟ್ ಪೀಠದ ಮೊರೆ ಹೋಗಿದ್ದರು.
