ನವದೆಹಲಿ: ಸುಪ್ರೀಂ ಕೋರ್ಟ್ ಕಟ್ಟಡದ ಮೇಲೆ ರಾಷ್ಟ್ರೀಯ ಲಾಂಛನವನ್ನು ಸ್ಥಾಪಿಸಲು ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಈ ಸಮಸ್ಯೆಯನ್ನು ಆಡಳಿತಾತ್ಮಕ ದೃಷ್ಟಿಯಿಂದ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದೆ.
ಸುಪ್ರೀಂ ಕೋರ್ಟ್ ಕಟ್ಟಡದ ಗುಮ್ಮಟದ ಮೇಲೆ ರಾಷ್ಟ್ರೀಯ ಲಾಂಛನವನ್ನು ಸ್ಥಾಪಿಸಲು ನಿರ್ದೇಶನ ಕೋರಿ ಬಾದರ್ವಾಡ ವೇಣುಗೋಪಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಪಂಚೋಲಿ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿತು.
ಹೊಸ ಕಟ್ಟಡ ನಿರ್ಮಿಸುವ ಪ್ರಕ್ರಿಯೆ ಜಾರಿಯಲ್ಲಿದೆ, ಹೀಗಾಗಿ ಮುಂದಿನ ದಿನಗಳಲ್ಲಿ ಈ ವಿಷಯವನ್ನು ಪರಿಗಣಿಸಬಹುದು. ಈ ಅರ್ಜಿಯನ್ನು ನ್ಯಾಯಾಂಗ ಪ್ರಕ್ರಿಯೆಗಳ ಹೊರತಾಗಿ ಆಡಳಿತಾತ್ಮಕವಾಗಿ ಪರಿಹರಿಸಬಹುದು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅಭಿಪ್ರಾಯ ವ್ಯಕ್ತಪಡಿಸಿದರು.
ಅರ್ಜಿದಾರರು ಈ ಕುರಿತು ಮೇ 2025 ರಲ್ಲಿ ಮುಖ್ಯ ನ್ಯಾಯಮೂರ್ತಿಗಳ ಕಚೇರಿಗೆ ಪತ್ರ ಬರೆದಿದ್ದೆ, ಇದಕ್ಕೆ 2025 ರ ನವೆಂಬರ್ 27 ರಂದು ಸುಪ್ರೀಂ ಕೋರ್ಟ್ ತನ್ನದೇ ಆದ ಲಾಂಛನವನ್ನು ಬಳಸುತ್ತದೆ ಎಂದು ಪ್ರತಿಕ್ರಿಯೆ ಬಂದಿತ್ತು ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ವಾದವನ್ನು ಆಲಿಸಿದ ಪೀಠ ಈ ವಿಷಯಕ್ಕೆ ಆಡಳಿತಾತ್ಮಕ ಪರಿಶೀಲನೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು, ನ್ಯಾಯಾಲಯದ ಪ್ರಧಾನ ಕಾರ್ಯದರ್ಶಿಗೆ ಸಕ್ಷಮ ಪ್ರಾಧಿಕಾರದ ಮುಂದೆ ವಿಷಯದ ಕುರಿತು ಟಿಪ್ಪಣಿಯನ್ನು ಕಳುಹಿಸಿಕೊಡುವಂತೆ ತಿಳಿಸಿ ಅರ್ಜಿಯನ್ನು ವಜಾಗೊಳಿಸಿತು.
