ಸರ್ಕಾರಿ ವೆಚ್ಚ ಹಾಗೂ ಸರ್ಕಾರದ ನೆರವಿನಿಂದ ಕೈಗೊಳ್ಳುವ ಯಾವುದೇ ಕಾಮಗಾರಿ ಹಾಗೂ ಯೋಜನೆಗಳಲ್ಲಿ ಜನ ಪ್ರತಿನಿಧಿಗಳ ಹೆಸರು ಮತ್ತು ಫೋಟೋಗಳನ್ನು ಅಳವಡಿಸಬಾರದು. ಈಗಾಗಲೇ ಅವಳಡಿಸಿದ್ದರೆ ಕೂಡಲೇ ತೆರವುಗೊಳಿಸಬೇಕು. ಮತ್ತೆ ಅಳವಡಿಸಿದರೆ ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಜಾಹೀರಾತುಗಳಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಹೆಸರು ಮತ್ತು ಫೋಟೋಗಳನ್ನು ಅಳವಡಿಸುವುದನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.
ಪ್ರಕರಣದ ಹಿನ್ನೆಲೆ: ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಿಂದ ಸಾರ್ವಜನಿಕ ವೆಚ್ಚದಲ್ಲಿ ಅನುಷ್ಠಾನಗೊಳಿಸುವ ಯೋಜನೆಗಳು, ನಿರ್ವಹಿಸುವ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಸಾರ್ವಜನಿಕವಾಗಿ ಪ್ರಚುರಪಡಿಸುವ ಸಂದರ್ಭದಲ್ಲಿ ರಾಷ್ಟ್ರಪತಿ, ಪ್ರಧಾನಮಂತ್ರಿ, ಮುಖ್ಯ ನ್ಯಾಯಮೂರ್ತಿ, ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ರಾಷ್ಟ್ರಪಿತ ಅವರ ಭಾವಚಿತ್ರ ಹೊರತುಪಡಿಸಿ ಬೇರೆ ಯಾವುದೇ ರಾಜಕೀಯ ಪಕ್ಷ, ಜನಪ್ರತಿನಿಧಿಗಳ ಭಾವಚಿತ್ರಗಳನ್ನು ಅಳವಡಿಸಬಾರದು ಎಂದು ಸುಪ್ರೀಂ ಕೋರ್ಟ್ 2015ರ ಮೇ 13ರಂದು ತೀರ್ಪು ನೀಡಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ 2021ರ ಆಗಸ್ಟ್ 24ರಂದು ನಗರಾಭಿವೃದ್ಧಿ ಇಲಾಖೆ ಕೂಡ ಸುತ್ತೋಲೆ ಹೊರಡಿಸಿದೆ. ಆದರೆ, ರಾಜ್ಯದಲ್ಲಿ ರಸ್ತೆ, ಕುಡಿಯುವ ನೀರು ಘಟಕ, ಮೇಲ್ಸೇತುವೆ ಮತ್ತು ಒಳಚರಂಡಿ ನಿರ್ಮಾಣ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಬಸ್ ನಿಲ್ದಾಣ, ಸಾರ್ವಜನಿಕ ಶೌಚಾಲಯ, ಆಟದ ಮೈದಾನ ಮತ್ತು ಉದ್ಯಾನಗಳಲ್ಲಿ ಅಳವಡಿಸಿರುವ ಜಾಹೀರಾತುಗಳಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು ಮತ್ತವರ ಬೆಂಬಲಿಗರ ಹೆಸರು ಮತ್ತು ಫೋಟೋ ಪ್ರಕಟಿಸಲಾಗಿದೆ. ನಿಯಮ ಉಲ್ಲಂಘನೆಯನ್ನು ಆಕ್ಷೇಪಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿತ್ತು.
ಸರ್ಕಾರದ ಸುತ್ತೋಲೆಯಲ್ಲಿ ಏನಿದೆ: ರಾಜ್ಯದ ನಗರಾಭಿವೃದ್ಧಿ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಮಂಡಳಿ, ನಿಗಮ, ಸಂಸ್ಥೆಗಳು, ಮಹಾನಗರ ಪಾಲಿಕೆಗಳು, ನಗರಾಭಿವೃದ್ಧಿ ಪ್ರಾಧಿಕಾರಗಳು, ನಗರ ಯೋಜನಾ ಪ್ರಾಧಿಕಾರಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸರ್ಕಾರಿ ವೆಚ್ಚದಲ್ಲಿ ಅಥವಾ ಸರ್ಕಾರದ ನೆರವಿನೊಂದಿಗೆ ಕೈಗೊಳ್ಳುವ ಯಾವುದೇ ಕಾಮಗಾರಿ, ಯೋಜನೆ ಅಥವಾ ಎಲ್ಲಾ ನಿಗಮ, ಮಂಡಳಿ, ಸಂಸ್ಥೆಗಳು ಸೇರಿದಂತೆ ಎಲ್ಲಾ ಮಹಾನಗರ ಪಾಲಿಕೆಗಳು, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವತಿಯಿಂದ ಕೈಗೊಳ್ಳುವ, ನಿರ್ವಹಿಸುತ್ತಿರುವ ಕಾಮಗಾರಿಗಳು, ನಿರ್ಮಾಣವಾಗುವ ವಿವಿಧ ಕಾಮಗಾರಿಗಳು ಮತ್ತು ಯೋಜನೆಗಳನ್ನು ಅನುಷ್ಠಾನಗೊಳಿಸುವಾಗ ಜನ ಪ್ರತಿನಿಧಿಗಳ ಹೆಸರು ಮತ್ತು ಫೋಟೋಗಳನ್ನು ಅಳವಡಿಸಿ ಪ್ರಚಾರ ನೀಡಬಾರದು ಎಂದು ಸುತ್ತೋಲೆಯಲ್ಲಿ ನಿರ್ದೇಶಿಸಲಾಗಿದೆ.
ಅಲ್ಲದೆ, ಈಗಾಗಲೇ ಸರ್ಕಾರಿ ಕಾಮಗಾರಿಗಳ ಮೇಲೆ ಜನ ಪ್ರತಿನಿಧಿಗಳು ಹೆಸರು ಮತ್ತು ಪೋಟೋಗಳನ್ನು ಆಳವಡಿಸಿದ್ದರೆ, ಕೂಡಲೇ ಅವುಗಳನ್ನು ತೆರವುಗೊಳಿಸಬೇಕು. ಒಂದು ವೇಳೆ ಅಂತಹ ಪ್ರಕರಣಗಳು ಮರುಕಳಿಸಿದ್ದಲ್ಲಿ ಕರ್ನಾಟಕ ಮುಕ್ತ ಸ್ಥಳಗಳ (ವಿರೂಪಗೊಳಿಸುವಿಕೆ ತಡೆ) ಕಾಯ್ದೆ-1981 ಅಡಿ ಸಂಬಂಧಪಟ್ಟವರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದೇಶ ಅನುಷ್ಠಾನಗೊಳಿಸಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
(WP 7135/2021)